ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವನ್ಯಜೀವಿಯೊಂದಕ್ಕೆ ಚಿಕಿತ್ಸೆ ನೀಡಲು ಹೋಗಿದ್ದ ಪಶುವೈದ್ಯೆಯೊಬ್ಬರ ಮೇಲೆ ಪ್ರಾಣಿ ದಾಳಿ ಮಾಡಿದ್ದು, ಈ ದಾಳಿಯಲ್ಲಿ ಅವರು ಪ್ರಾಣ ಕಳೆದುಕೊಂಡಿದ್ದಾರೆ.

ಸಮೀಕ್ಷಾ ರೆಡ್ಡಿ ಪ್ರಾಣ ಕಳೆದುಕೊಂಡು ಪಶು ವೈದ್ಯೆ.
ಡಾ.ಸಮೀಕ್ಷಾ ರೆಡ್ಡಿ ಗುತ್ತಿಗೆ ಆಧಾರದಲ್ಲಿ ಇತ್ತೀಚೆಗಷ್ಟೇ ನೇಮಕಗೊಂಡಿದ್ದರು. ನಿನ್ನೆ ರಾತ್ರಿ 11.30 ರ ಸಮಯದಲ್ಲಿ ನೀರಾನೆಗೆ ಚಿಕಿತ್ಸೆ ನೀಡಲು ತೆರಳಿದ್ದು, ಈ ವೇಳೆ ನೀರಾನೆ ವೈದ್ಯೆ ಮೇಲೆ ಹಠಾತ್ ದಾಳಿ ಮಾಡಿದೆ. ಈ ದಾಳಿಯಿಂದ ಗಂಭೀರ ಗಾಯಗೊಂಡ ವೈದ್ಯೆ ಸಮೀಕ್ಷಾರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 6.30 ರ ಸುಮಾರಿಗೆ ಅವರು ಸಾವಿಗೀಡಾಗಿದ್ದಾರೆ.
ಈ ಘಟನೆ ಸಂಬಂಧ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ವ್ಯಕ್ತಪಡಿಸಿದ್ದು, ತನಿಖೆಗೆ ಆದೇಶ ನೀಡಿದ್ದಾರೆ. ಮೃತ ಯುವ ವೈದ್ಯೆಯ ಕುಟುಂಬದವರಿಗೆ ನಿಯಮಾನುಸಾರ ವನ್ಯಜೀವಿಗೆ ಪರಿಹಾರ ನೀಡಲು ಸಚಿವರು ಸೂಚನೆ ನೀಡಿದ್ದು, ರಾಜ್ಯದ ಎಲ್ಲಾ ಮೃಗಾಲಯಗಳ ಪಶುವೈದ್ಯರು ಯಾವುದೇ ವನ್ಯಜೀವಿಗೆ ಚಿಕಿತ್ಸೆ ನೀಡುವಾಗ ಎಸ್ಓಪಿ ಪಾಲಿಸಬೇಕು ಎಂದು ಸೂಚನೆ ಇದೆ.
ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಮೃಗಾಲಯ ಪ್ರಾಧಿಕಾರದ ನಿರ್ದೇಶಕ ಅಮರಾಕ್ಷರ ಹೇಳಿಕೆ ನೀಡಿದ್ದು, ಡಾ. ಸಮೀಕ್ಷಾ ರೆಡ್ಡಿ ಫೆಬ್ರವರಿಯಲ್ಲಿ ಹುದ್ದೆಗೆ ಸೇರಿದ್ದರು. ಅವರು ತ್ಯಾವರೆಕೊಪ್ಪ ಮೃಗಾಲಯಕ್ಕೆ ಫಾಲೋ ಅಪ್ ಟ್ರೀಟ್ಮೆಂಟ್ಗೆ ಹೋಗಿದ್ದರು. ಎರಡು ಮೂರು ದಿನಗಳಲ್ಲಿ ಮರಿ ಹಾಕಲಿರುವ ನೀರಾನೆಯ ತಪಾಸಣೆ ಮಾಡಲು ತೆರಳಿದ್ದರು. ಆದರೆ ನೀರಾನೆ ಇದಕ್ಕಿದ್ದಂತೆ ಸಮೀಕ್ಷಾ ರೆಡ್ಡಿ ಮೇಲೆ ದಾಳಿ ನಡೆಸಿದೆ. ತಕ್ಷಣವೇ ಸಮೀಕ್ಷಾ ಅವರನ್ನುಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದೆವು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸಮೀಕ್ಷಾ ರೆಡ್ಡಿ ಸಾವನ್ನಪ್ಪಿದ್ದಾರೆ ಎಂದು ಶಿವಮೊಗ್ಗ ಮೃಗಾಲಯ ಪ್ರಾಧಿಕಾರದ ನಿರ್ದೇಶಕ ಅಮರಾಕ್ಷರ ಮಾಹಿತಿ ನೀಡಿದ್ದಾರೆ.

