

ಹಾಸನದಲ್ಲಿ ಗುಂಡಿನ ಸದ್ದು ಮೊಳಗಿದ್ದು ಇಬ್ಬರು ಬಲಿಯಾದ ಘಟನೆಯೊಂದು ವರದಿಯಾಗಿದೆ. ಈ ಘಟನೆ ಸೋಮವಾರ ಸಂಜೆ ನಡೆದಿದೆ. ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ನವೀನ್ ( 39) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನುಳಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಾಧ್ಯವೊಂದು ವರದಿ ಮಾಡಿದೆ.
ಹಾಸನ ಜಿಲ್ಲೆ ಸಕಲೇಶಪುರ (Sakaleshapur, Hassan) ತಾಲೂಕಿನ ತಂಬಲಗೇರಿ (Tambalageri) ಗ್ರಾಮದ ಹೊರವಲಯದಲ್ಲಿ ಗುಂಡಿನ ದಾಳಿ ನಡೆದಿದೆ. ನವೀನ್ ಸೇರಿದಂತೆ ನಾಲ್ವರು ಮೀನು ಹಿಡಿಯಲು ತೆರಳಿದ್ದ ವೇಳೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ನವೀನ್ ಜೊತೆಯಲ್ಲಿ ಅವರ ಗೆಳೆಯರಾದ ದಯಾನಂದ್, ಪದ್ಮನಾಭ್, ರಾಜಾಚಾರಿ ಇದ್ದರು. ಈ ದಾಳಿಯಲ್ಲಿ ದಯಾನಂದ್ ಮತ್ತು ಪದ್ಮಾನಾಭ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಹಾಗೆನೇ ಗಾಯಾಳುಗಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ (Private Hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮೃತ ನವೀನ್ ಬಿಜೆಪಿ ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತನಾಗಿದ್ದು, ಪೊಲೀಸರು ಈ ದಿಕ್ಕಿನಲ್ಲಿ ತನಿಖೆ ನಡೆಸುವ ಸಾಧ್ಯತೆ ಇದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗೆ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆ ನಡೆದ ಸ್ಥಳದಲ್ಲಿ ರಾತ್ರಿಯೆಲ್ಲಾ ಪೊಲೀಸರನ್ನು ನಿಯೋಜಿಸಲಾಗಿತ್ತು. ಈ ಸಂಬಂಧ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಣಿಗಳ ಬೇಟೆಗೆ ಬಂದ ತಂಡದಿಂದಲೇ ಈ ಗುಂಡಿನ ದಾಳಿ ನಡೆದಿದೆ ಎಂದು ಶಂಕೆ ವ್ಯಕ್ತವಾಗಿವೆ. ಆದ್ರೆ ಈ ಬಗ್ಗೆ ಪೊಲೀಸರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.













