

HD Ranganath : ಕೃಷಿ ಕಾರ್ಯದಲ್ಲಿ ತೊಡಗಿಕೊಂಡು ರೈತರಾಗಿರುವ ಯುವಕರಿಗೆ ಹೆಣ್ಣು ಕೊಡಲು ಅನೇಕರು ಹಿಂದೇಟು ಹಾಕುತ್ತಿದ್ದಾರೆ. ಹುಡುಗಿಯರು ಕೂಡ ತಾವ ರೈತರನ್ನು ಮದುವೆಯಾಗುವುದಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ. ಹೀಗಾಗಿ ರೈತ ಯುವಕರ ಪಾಡಂತೂ ಹೇಳತೀರದಾಗಿದೆ. ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಶಾಸಕರು ಒಬ್ಬರು ರೈತರನ್ನು ಮದುವೆಯಾಗುವ ಹುಡುಗಿಯರಿಗೆ ವಿಶೇಷ ಭತ್ಯೆ ಮತ್ತು ಸ್ಥಾನಮಾನ ನೀಡಿ ಎಂದು ಪತ್ರವನ್ನು ಬರೆದಿದ್ದಾರೆ.
ಯಸ್, ಗ್ರಾಮಗಳಲ್ಲ ವಾಸವಿದ್ದು, ವ್ಯವಸಾಯ ಮಾಡುವ ಗಂಡು ಮಕ್ಕಳನ್ನು ಮದುವೆ ಆಗುವ ಹೆಣ್ಣು ಮಕ್ಕಳಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ಸ್ಥಾನಮಾನ ಘೋಷಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕುಣಿಗಲ್ ಶಾಸಕ ಡಾ.ಹೆಚ್.ಡಿ ರಂಗನಾಥ್ ಪತ್ರ ಬರೆದು ಮನವಿ ಮಾಡಿದ್ದಾರೆ.
ರಾಜ್ಯದ ಹಳ್ಳಿಗಳಲ್ಲಿ ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ರೈತರ ಮಕ್ಕಳು ಕೃಷಿ ಚಟುವಟಿಕೆಗಳತ್ತ ಆಕರ್ಷಿತರಾಗುತ್ತಿಲ್ಲ. ಅಲ್ಲದೆ ಯುವಕರು ಹಳ್ಳಿಯ ಬದಲಾಗಿ ಪಟ್ಟಣಗಳತ್ತ ವಲಸೆ ಹೋಗುತ್ತಿದ್ದಾರೆ. ಕೃಷಿಯಲ್ಲಿ ನಿರೀಕ್ಷಿತ ಲಾಭ ಸಿಗದೆ ಇರುವುದು ಹಾಗೂ ಇನ್ನಿತರ ಸಮಸ್ಯೆಗಳಿಂದ ಕೃಷಿಯಿಂದ ದೂರ ಹೋಗುವಂತಹ ಪರಿಸ್ಥಿತಿ ಇದೆ. ಈ ಎಲ್ಲಾ ಸಮಸ್ಯೆಗಳನ್ನು ಎದುರಿಸಿ ನಿಂತು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಯುವಕರಿಗೆ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ. ರೈತರ ಮಕ್ಕಳು ಎಂಬ ಕಾರಣಕ್ಕಾಗಿ ಹೆಣ್ಣು ಕೊಡಲು ಯಾರೂ ಮುಂದಾಗುತ್ತಿಲ್ಲ. ಹೀಗಾಗಿ ದೂರದ ಜಿಲ್ಲೆಗಳ ಮದುವೆ ಸಂಬಂಧ ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಎಚ್ ಡಿ ರಂಗನಾಥ್ ಈ ಬೇಡಿಕೆಯನ್ನು ಇಟ್ಟಿದ್ದಾರೆ.
ಪತ್ರದಲ್ಲಿ ಏನಿದೆ?
ʼʼನನ್ನ ಮತ ಕ್ಷೇತ್ರ ಕುಣಿಗಲ್ ತಾಲೂಕು ಗ್ರಾಮೀಣ ಪ್ರದೇಶವಾಗಿದ್ದು, ಹೆಚ್ಚಿನವರು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರನ್ನು ಮದುವೆ ಆಗಲು ಹೆಣ್ಣು ಮಕ್ಕಳು ನಿರಾಕರಿಸುತ್ತಿದ್ದು, 30 ವರ್ಷ ದಾಟಿದರೂ ಅವರ ವಿವಾಹ ನಡೆಯುತ್ತಿಲ್ಲ. ಹೀಗಾಗಿ ಅವರು ತೊಂದರೆಗೆ ಸಿಲುಕಿದ್ದು, ವ್ಯವಸಾಯ ಮಾಡಿಕೊಂಡಿರುವವರನ್ನು ಮದುವೆ ಆಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ, ವಿಶೇಷ ಸ್ಥಾನಮಾನವನ್ನು ಘೋಷಿಸಬೇಕುʼʼ ತಿಳಿಸಿದ್ದಾರೆ.
ಸರ್ಕಾರದ ಹೊಸ ಯೋಜನೆಯು ರೈತ ಕುಟುಂಬಗಳ ಮೇಲಿನ ಸಾಮಾಜಿಕ ಒತ್ತಡವನ್ನು ಕಡಿಮೆ ಮಾಡಲಿದೆ ಮತ್ತು ಗ್ರಾಮೀಣ ಪ್ರದೇಶದ ಜನಜೀವನವನ್ನು ಉತ್ತಮಪಡಿಸಲಿದೆ. ಉದ್ದೇಶಿತ ಭತ್ಯೆ ಗ್ರಾಮೀಣ-ನಗರ ಅಂತರವನ್ನು ಕಡಿಮೆ ಮಾಡಲು, ರೈತರ ಕುಟುಂಬಗಳಿಗೆ ಬೆಂಬಲ ನೀಡಲು ಮತ್ತು ಕೃಷಿ ಸಮುದಾಯಗಳು ಎದುರಿಸುತ್ತಿರುವ ಕಷ್ಟಗಳತ್ತ ಗಮನ ಸೆಳೆಯಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ
