ಉಡುಪಿಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿರುವ ಇ-ಮೇಲ್ ಸಂದೇಶ ನ್ಯಾಯಾಲಯದ ಅಧಿಕೃತ ಇ-ಮೇಲ್ಗೆ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.


ಮೇಲ್ ಬಂದ ತಕ್ಷಣ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ನ್ಯಾಯಾಲಯ ಸಂಕೀರ್ಣದಲ್ಲಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದರು. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೇರಿದಂತೆ ವಿವಿಧ ನ್ಯಾಯಾಲಯಗಳ ಕಟ್ಟಡಗಳು ಹಾಗೂ ಆವರಣದ ವಿವಿಧ ಭಾಗಗಳಲ್ಲಿ ಪೊಲೀಸರು ಕೂಲಂಕಷ ಪರಿಶೀಲನೆ ನಡೆಸಿದರು.
ಭದ್ರತಾ ದೃಷ್ಟಿಯಿಂದ ನ್ಯಾಯಾಲಯ ಸಂಕೀರ್ಣದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ನ್ಯಾಯಾಲಯಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ಸಿಬ್ಬಂದಿಯ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ಬೆದರಿಕೆ ಸಂದೇಶ ಕಳುಹಿಸಿದವರ ಮೂಲ ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸ್ಥಳದಲ್ಲಿ ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ, ಉಡುಪಿ ನಗರ ಪೊಲೀಸ್ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಹಾಜರಿದ್ದು, ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸಿದರು.
