ಬೆಂಗಳೂರು: ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿ ಬಂದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆದಿದೆ. ಈ ಕುರಿತು ಸಿದ್ದರಾಮಯ್ಯ ಅವರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುವುದಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಹಿಂದೆ ಕೂಡಾ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳನ್ನು ಮಾತ್ರ ಒಳಗೊಂಡ ದ್ವಿಭಾಷಾ ನೀತಿಯನ್ನು ಜಾರಿಗೆ ತರಲು ಪ್ರೊ.ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ (SEP) ಆಯೋಗ ಶಿಫಾರಸು ಮಾಡಿತ್ತು.
ಕನ್ನಡ ಪರ ಸಂಘಟನೆಗಳ ಮನವಿ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಹಿಂದಿ ಅವಶ್ಯಕತೆ ಇಲ್ಲ ಅಂತ ಕನ್ನಡಪರ ಸಂಘಟನೆಗಳು ಹೇಳ್ತಿವೆ. ಸಿಎಂ ಕೂಡ ದ್ವಿಭಾಷಾ ಸೂತ್ರ ತಂದರೆ ಒಳ್ಳೆಯದು ಅಂತ ಹೇಳಿದ್ದಾರೆ. ದ್ವಿಭಾಷಾ ಸೂತ್ರ ಬಂದರೆ ಒಳ್ಳೆಯದು. ಈಗ ತ್ರಿಭಾಷಾ ಸೂತ್ರ ಇದೆ. ಇದು ಬದಲಾವಣೆ ಆಗಬೇಕಾದ್ರೆ ಚರ್ಚೆ ಆಗಬೇಕು. ಶಿಕ್ಷಕರ ಜೊತೆಯೂ ಮಾತಾಡ್ತೀವಿ, ಸಿಎಂ ಜೊತೆ ನಾವು ಮಾತಾಡಬೇಕು. ಎಲ್ಲಾ ಆಯಾಮಗಳಲ್ಲಿ ಚರ್ಚಿಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಹಾಗಾಗಿ ಯಾರೂ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕೋದು ಬೇಡ. ಸಿಎಂ ಜೊತೆ ಮಾತಾಡಿ ಇಂದೇ ಈ ಬಗ್ಗೆ ನಿರ್ಧಾರ ಮಾಡ್ತೀವಿ ಎಂದು ಹೇಳಿದ್ದಾರೆ.
