Home News ಗೋಹತ್ಯೆ ನಿಷೇಧ – ಗೋ ಅಹೆಡ್ ಅಂದ ಹೈಕೋರ್ಟ್ !!

ಗೋಹತ್ಯೆ ನಿಷೇಧ – ಗೋ ಅಹೆಡ್ ಅಂದ ಹೈಕೋರ್ಟ್ !!

Hindu neighbor gifts plot of land

Hindu neighbour gifts land to Muslim journalist

ಗೋಹತ್ಯೆ ನಿಷೇಧ ಕಾಯ್ದೆಯ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಸೆಕ್ಷನ್ 5 ಅಡಿಯಲ್ಲಿ ರೂಪಿಸಿರುವ ನಿಯಮಗಳನ್ನು ಜಾರಿಗೆ ತರಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ಗೋಹತ್ಯೆ ನಿಷೇಧ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರಿಫ್ ಜಮೀಲ್ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥೆ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ಇದೇ ವೇಳೆ, ನಿಯಮ ಜಾರಿಯು ಅರ್ಜಿ ಕುರಿತಂತೆ ನ್ಯಾಯಾಲಯ ನೀಡುವ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಕೂಡ ಸ್ಪಷ್ಟಪಡಿಸಿದೆ.

ಇದಕ್ಕೂ ಮುನ್ನ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಸಂರಕ್ಷಣಾ ಕಾಯ್ದೆ ಸೆಕ್ಷನ್ 5ರಡಿ ನಿಯಮ ರೂಪಿಸಿ ಅವುಗಳನ್ನು ಜಾರಿಗೆ ತರುವವರೆಗೆ ಯಾವುದೇ ವ್ಯಕ್ತಿಯ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು 2021ರ ಜನವರಿ 20ರಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ನ್ಯಾಯಾಲಯದ ನಿರ್ದೇಶನದಂತೆ ಕಾಯ್ದೆಯ ಸೆಕ್ಷನ್ 5ರ ಅಡಿಯಲ್ಲಿ ಜಾನುವಾರ ಸಾಗಣೆಗೆ ಸಂಬಂಧಿಸಿದಂತೆ ನಿಯಮ ರೂಪಿಸಲಾಗಿದೆ. ಕಾಯ್ದೆಯ ಸೆಕ್ಷನ್ 5ನ್ನು ಜಾರಿಗೊಳಿಸಲು ಅನುಮತಿ ನೀಡಬೇಕು ಎಂದು ಕೋರಿದರು.

ಸರ್ಕಾರದ ಮನವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅರ್ಜಿದಾರರ ಪರ ವಕೀಲರು, ಕಾಯ್ದೆಯ ಸಿಂಧುತ್ವ ಪ್ರಶ್ನಿಸಿಯೇ ಅರ್ಜಿ ಸಲ್ಲಿಸಲಾಗಿದೆ. ಕಾಯ್ದೆ ಮತ್ತು ನಿಯಮಗಳನ್ನು ಜಾರಿ ಮಾಡುವುದರಿಂದ ನಿರ್ದಿಷ್ಟ ಸಮುದಾಯಕ್ಕೆ ತೊಂದರೆ ಉಂಟಾಗಲಿದೆ. ಆದ್ದರಿಂದ ಸೆಕ್ಷನ್ 5ರ ಜಾರಿಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದರು.

ಸೆಕ್ಷನ್ 5 ರ ನಿಯಮಗಳು :

ಕಾಯ್ದೆಯ ಸೆಕ್ಷನ್ 5 ಪ್ರಕಾರ, ಯಾವುದೇ ವ್ಯಕ್ತಿ ಯಾವುದೇ ರೀತಿಯಲ್ಲೂ ರಾಜ್ಯದ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಕೊಲ್ಲುವ ಉದ್ದೇಶಕ್ಕೆ ಜಾನುವಾರುಗಳನ್ನು ಸಾಗಿಸಬಾರದು ಅಥವಾ ಸಾಗಣೆಗೆ ಅವಕಾಶ ಮಾಡಿಕೊಡಬಾರದು. ನಿಯಮ ಉಲ್ಲಂಘಿಸಿ ಸಾಗಣೆ ಮಾಡಿದರೆ ಅದು ಅಪರಾಧ ಕೃತ್ಯವಾಗಲಿದೆ. ಆದರೆ, ಕೃಷಿ ಮತ್ತು ಪಶುಸಂಗೋಪನೆ ಉದ್ದೇಶಕ್ಕೆ ಕೇಂದ್ರ ಅಥವಾ ರಾಜ್ಯ ಸರ್ಕಾರ ನಿಗದಿಪಡಿಸಿರುವ ನಿಯಮಗಳ ಅನುಸಾರ ಜಾನುವಾರು ಸಾಗಣೆ ಅಪರಾಧ ಕೃತ್ಯವಾಗುವುದಿಲ್ಲ.

ಪ್ರಕರಣದ ಹಿನ್ನೆಲೆ:

ರಾಜ್ಯದಲ್ಲಿ ಎಲ್ಲಾ ವಯಸ್ಸಿನ ಆಕಳು, ಕರು, ಗೂಳಿ, ಎತ್ತು ಹಾಗೂ 13 ವರ್ಷದೊಳಗಿನ ಕೋಣ ಹಾಗೂ ಎಮ್ಮೆಗಳ ಹತ್ಯೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯಡಿ ಜಾರಿಗೊಳಿಸಿದೆ. ಈ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿರುವ ಅರ್ಜಿದಾರರು, ಕಾಯ್ದೆಯ ಸೆಕ್ಷನ್ 5 ಪ್ರಕಾರ ರಾಜ್ಯದ ಒಳಗೆ ಅಥವಾ ಹೊರಕ್ಕೆ ಜಾನುವಾರುಗಳನ್ನು ಸಾಗಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ನಿಯಮವು ಕೃಷಿ ಮತ್ತು ಪಶುಸಂಗೋಪನೆ ಉದ್ದೇಶಗಳಿಗೆ ಸಾಗಣೆ ಮಾಡುವುದಕ್ಕೂ ಅಡ್ಡಿ ಉಂಟುಮಾಡುತ್ತಿದೆ. ಜಾನುವಾರುಗಳನ್ನು ಸಾಗಣೆ ಮಾಡಬೇಕಾದರೆ ಜಾನುವಾರುಗಳ ಮಾಲೀಕತ್ವದ ದಾಖಲೆ ಹಾಗೂ ಸಾಗಣೆ ಪ್ರಮಾಣಪತ್ರ ಹೊಂದಿರಬೇಕು ಎಂಬ ನಿಯಮಗಳುರೈತರಿಗೆ ತೀವ್ರ ತೊಂದರೆ ಉಂಟು ಮಾಡಲಿವೆ. ರೈತರು ಎಲ್ಲ ಸಂದರ್ಭದಲ್ಲೂ ಪ್ರಮಾಣಪತ್ರ ಹೊಂದಿರಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆ ಪರಿಹರಿಸುವ ಕುರಿತು ಸ್ಪಷ್ಟನೆ ನೀಡಬೇಕು ಎಂದು ಕೋರಿದ್ದರು.

ಈ ಹಿನ್ನೆಲೆಯಲ್ಲಿ ಹೈಕೋರ್ಟ್, ಕಾಯ್ದೆಯ ನಿಯಮಗಳನ್ನು ಅಂತಿಮಗೊಳಿಸುವವರೆಗೆ ರಾಜ್ಯದಲ್ಲಿ ಜಾನುವಾರುಗಳನ್ನು ಸಾಗಣೆ ಮಾಡುವವರ ವಿರುದ್ಧ ಸೆಕ್ಷನ್ 5ರ ಪ್ರಕಾರ ಯಾವುದೇ ಕಠಿಣ ಕ್ರಮ ಜರುಗಿಸಬಾರದು ಎಂದು 2021ರ ಜನವರಿ 20ರಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿತ್ತು.