ಮಹಾರಾಷ್ಟ್ರದಲ್ಲಿ ಪ್ರಯೋಗಾಲಯದಲ್ಲಿ ಪರೀಕ್ಷೆಯ ನೆಪದಲ್ಲಿ ದಿನಗಟ್ಟಲೆ ತಡೆಹಿಡಿಯಲಾಗಿದ್ದ ಕರ್ನಾಟಕ ಅಡಿಕೆ ಸರಕುಗಳ ವಾಹನಗಳನ್ನು ಬಿಡುಗಡೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಜೊತೆ ಸಚಿವ ಪ್ರಲ್ಹಾದ್ ಜೋಶಿ ನಡೆಸಿದ ಮಾತುಕತೆ ಯಶಸ್ವಿಗೊಂಡಿದೆ.

ಕ್ಯಾಂಪ್ಕೋ, ಮಾಮ್ಕೋಸ್, ತುಮ್ಕೋಸ್ ಹಾಗೂ ಕರ್ನಾಟಕ ರಾಜ್ಯ ಅಡಿಕೆ ಸಹಕಾರಿ ಮಹಾಮಂಡಳದ ಜಂಟಿ ನಿಯೋಗವು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿತ್ತು. ಉತ್ತರ ಭಾರತದ ಮಾರುಕಟ್ಟೆಗಳಿಗೆ ತಲುಪಬೇಕಾದ ಸರಕನ್ನು ಅನಗತ್ಯವಾಗಿ ತಡೆ ಹಿಡಿದಿರುವುದರಿಂದ ಹಾಳಾಗುವ ಭೀತಿ ಎದುರಾಗಿದೆ ಮತ್ತು ಇದರಿಂದ ರೈತರಿಗೆ ಭಾರೀ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ ಎಂದು ನಿಯೋಗ ವಿವರಣೆ ನೀಡಿತ್ತು.
ಸಮಸ್ಯೆಯ ಕುರಿತು ಅರಿತ ಸಚಿವ ಪ್ರಲ್ಹಾದ್ ಜೋಶಿ ಅವರು ಕೂಡಲೇ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರ ಜೊತೆ ಈ ಕುರಿತು ಚರ್ಚೆ ಮಾಡಿದ್ದು, ಮನವಿಗೆ ಸಕಾರಾತ್ಮಕವಾಗಿ ಸ್ಪಂದನೆ ಮಾಡಿದ ಮಹಾರಾಷ್ಟ್ರ ಸಿಎಂ ಅವರು ಕೂಡಲೇ ತಡೆಹಿಡಿಯಲಾಗಿರುವ ಕರ್ನಾಟಕದ ಅಧಿಕೃತ ಅಡಿಕೆ ಸರಕನ್ನು ಕೂಡಲೇ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇಷ್ಟು ಮಾತ್ರವಲ್ಲದೇ ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಸಾಗಣೆ ಕಾರ್ಯಾಚರಣೆಗಳಿಗೆ ಅಡ್ಡಿಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಲು ಸೂಕ್ತ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಈ ಮಾತುಕತೆಯ ನಂತರ ಸಚಿವ ಪ್ರಲ್ಹಾದ್ ಜೋಶಿ ಅವರು ಟ್ವೀಟ್ ಮಾಡಿದ್ದಾರೆ. ಈ ಮಾತುಕತೆಯ ಸಂದರ್ಭದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಹಾಗೂ ಶಾಸಕ ಅರಗ ಜ್ಞಾನೇಂದ್ರ, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕ ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.

