Puttur : ಪುತ್ತೂರಲ್ಲಿ ಬಿಜೆಪಿ ಮುಖಂಡ (Puttur BJP Leader) ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಮಗು ಕರುಣಿಸಿದ ಪ್ರಕರಣ ಜಿಲ್ಲೆಯಲ್ಲಿ ಮಾತ್ರವಲ್ಲದೆ ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು. ಈ ವಿಚಾರ ಹೈಕೋರ್ಟ್ ಮೆಟ್ಟಿಲನ್ನು ಕೂಡ ಏರಿತ್ತು. ಇದೀಗ ಈ ಪ್ರಕರಣದ ಕುರಿತಾಗಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಲ್ಲದೆ ಸಂತ್ರಸ್ತೆ ಹಾಗೂ ಮಗುವಿನ ಅಗತ್ಯತೆಗಳನ್ನು ಪೂರೈಸುವ ಉದ್ದೇಶದಿಂದ ಪ್ರತೀ ತಿಂಗಳು 75 ಸಾವಿರ ರೂ.ಗಳನ್ನು ಪಾವತಿಸಬೇಕೆಂದು ಸೂಚಿಸಲಾಗಿದೆ.


ಈ ಪ್ರಕರಣ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ. ಅಲ್ಲದೇ ಯುವತಿ ಹಾಗೂ ಮಗುವನ್ನು ಅನಾಥವನ್ನಾಗಿಸುವ ಬದಲು ತಂದೆಯಾಗಿ ಮಗುವಿನ ಆರೈಕೆ ಮಾಡುವುದು ಆರೋಪಿ ಕರ್ತವ್ಯ. ಇಲ್ಲದಿದ್ದರೆ ಯುವತಿಗೆ ಮಾಸಿಕ 10 ಸಾವಿರ ಜೀವನಾಂಶ ನೀಡಲು ಸಿದ್ದರಿದ್ದಾರಾ ಎಂದು ಪ್ರಶ್ನಿಸಿದ್ದು, ಇದಕ್ಕೆ ಅಭಿಪ್ರಾಯ ತಿಳಿಸಿ ಎಂದು ಹೇಳಿ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಿತ್ತು. 24ರಂದು ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ . ನಾಗಪ್ರಸನ್ನ ಅವರ ಪೀಠ, ಸಂತ್ರಸ್ತೆ ಹಾಗೂ ಆಕೆಯ ಮಗುವಿನ ಪೋಷಣೆಗೆ ಪ್ರತಿ ತಿಂಗಳು 75 ಸಾವಿರ ರೂಪಾಯಿ ಪಾವತಿಸಬೇಕೆಂದು ಕಟ್ಟುನಿಟ್ಟಾಗಿ ನಿರ್ದೇಶನ ನೀಡಿದೆ.
ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ ರಾವ್ ಪುತ್ರ ಆರೋಪಿ ಶ್ರೀಕೃಷ್ಣ ಜೆ.ರಾವ್ ಮಗುವಿನ ಜೈವಿಕ ತಂದೆ ಎಂಬುದು ನಿರ್ವಿವಾದ ಮತ್ತು ಈ ಅಂಶ ಈಗಾಗಲೇ ವೈದ್ಯಕೀಯವಾಗಿ ದೃಢಪಟ್ಟಿದೆ. ಹೀಗಾಗಿ ಪ್ರಕರಣ ಇತ್ಯರ್ಥವಾಗುವ ತನಕ ಸಂತ್ರಸ್ತೆಯ ಜೀವನ ನಿರ್ವಹಣೆಗೆ ಪ್ರತಿ ತಿಂಗಳೂ 75 ಸಾವಿರ ಆರ್ಥಿಕ ನೆರವು ನೀಡಬೇಕು. ಮೊದಲ ಕಂತಿನ ಮೊತ್ತವನ್ನು ವಾರದೊಳಗೆ ಪಾವತಿಸಬೇಕು’ ಎಂದು ದೇಶದಲ್ಲೇ ಮೊದಲ ಬಾರಿಗೆ ಇಂತಹದೊಂದು ಮಹತ್ವದ ನ್ಯಾಯಾಂಗ ಆದೇಶವನ್ನು ಏಕಸದಸ್ಯ ನ್ಯಾಯಪೀಠ ಹೊರಡಿಸಿದೆ. ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶದಿಂದಾಗಿ ಪ್ರಕರಣದ ಮುಂದಿನ ವಿಚಾರಣೆ ತಾತ್ಕಾಲಿಕವಾಗಿ ನಿಲ್ಲಿಸಲ್ಪಟ್ಟಿದ್ದರೂ, ಸಂತ್ರಸ್ತೆಯ ಮತ್ತು ಮಗುವಿನ ಜೀವನೋಪಾಯಕ್ಕೆ ಆರ್ಥಿಕ ನೆರವು ಒದಗಿಸುವುದು ಕಡ್ಡಾಯವೆಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಇನ್ನೂ ಇದೇ ವೇಳೆ, ಸಂತ್ರಸ್ತೆ ಹಾಗೂ ಆಕೆಯ ಕುಟುಂಬಸ್ಥರು ಈ ವಿಚಾರದಲ್ಲಿ ಮಾಧ್ಯಮಗಳ ಮುಂದೆ ಮಾತನಾಡಬಾರದೆಂದು ಪೀಠ ನಿರ್ಬಂಧ ವಿಧಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 5ಕ್ಕೆ ಮುಂದೂಡಲಾಗಿದೆ.

