ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಹಿಂದಿನ ಸರ್ಕಾರದ ಸಚಿವರೊಬ್ಬರ ವಿರುದ್ಧ ತಿರುಪತ್ತೂರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕೇವಲ ಒಂದು ಮತದಿಂದ ಗೆದ್ದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಆರ್. ಶ್ರೀನಿವಾಸ ಸೇತುಪತಿ ಅವರಿಗೆ ಮದ್ರಾಸ್ ಹೈಕೋರ್ಟ್ ಶಾಕ್ ನೀಡಿದೆ.


ಹೌದು, ಚುನಾವಣೆಯಲ್ಲಿ ತಿರುಪತ್ತೂರ್ ವಿಧಾನಸಭಾ ಕ್ಷೇತ್ರದಲ್ಲಿ ಶ್ರೀನಿವಾಸ ಸೇತುಪತಿ 83,365 ಮತಗಳನ್ನು ಪಡೆದರೆ, ಪೆರಿಯಕರುಪ್ಪನ್ 83,364 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಶ್ರೀನಿವಾಸ ಸೇತುಪತಿ ಕೇವಲ ಒಂದು ಮತದ ಅಂತರದಿಂದ ಗೆದ್ದು ಬೀಗಿದ್ದರು. ಇದು ದೇಶಾದ್ಯಂತ ಭಾರಿ ರದ್ದು ಮಾಡಿತ್ತು. ಆದರೆ ಅಂಚೆ ಮತಗಳ ಎಣಿಕೆ ವೇಳೆ ಭಾರೀ ಅಕ್ರಮ ನಡೆದಿದೆ, ಆದ್ದರಿಂದ ಮರು ಮತಎಣಿಕೆಗೆ ನಿರ್ದೇಶಕ ನೀಡಬೇಕು ಎಂದು ಕರುಪ್ಪನ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ಕೆ.ಆರ್. ಪೆರಿಯಕರುಪ್ಪನ್ ಸಲ್ಲಿಸಿದ್ದ ಅರ್ಜಿ ಪರಿಗಣಿಸಿರುವ ನ್ಯಾಯಮೂರ್ತಿಗಳಾದ ಎಲ್. ವಿಕ್ಟೋರಿಯಾ ಗೌರಿ ಮತ್ತು ಎನ್. ಸೆಂಥಿಲ್ ಕುಮಾರ್ ಅವರನ್ನೊಳಗೊಂಡ ರಜಾಕಾಲದ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿದೆ. ವಿಧಾನಸಭೆಯಲ್ಲಿ ವಿಶ್ವಾಸ ಮತ ಹಾಕುವುದಕ್ಕೆ ಮದ್ರಾಸ್ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.
ಈ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಅಂತಿಮ ಆದೇಶ ಬರುವವರೆಗೂ ಶ್ರೀನಿವಾಸ ಸೇತುಪತಿ ಅವರು ಶಾಸಕರಾಗಿ ಯಾವುದೇ ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಂತೆ ನಿರ್ದೇಶನ ನೀಡಿದೆ. ಪ್ರಮುಖವಾಗಿ ಸಿಎಂ ವಿಜಯ್ ಅವರ ಬಹುಮತ ಸಾಬೀತು ಸಮಯದಲ್ಲಿ ಸಭೆಗೆ ದೂರವಾಗಿ ಇರುವಂತೆ ಆದೇಶ ನೀಡಿದೆ.
234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ 108 ಸ್ಥಾನಗಳನ್ನು ಗೆದ್ದಿದ್ದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಳಿಕ ಕಾಂಗ್ರೆಸ್, ವಿಸಿಕೆ, ಐಯುಎಂಎಲ್, ಸಿಪಿಐ ಹಾಗೂ ಸಿಪಿಎಂ ಬೆಂಬಲದೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಿತ್ತು. ಮೇ 10ರಂದು ವಿಜಯ್, ತಮಿಳಿನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈಗ ಬುಧವಾರದಂದು ಸದನದಲ್ಲಿ ಬಹುಮತ ಸಾಬೀತು ಮಾಡಬೇಕಿರುವ ಒತ್ತಡದಲ್ಲಿದ್ದಾರೆ.

