

ಬೆಂಗಳೂರು: ರಾಜ್ಯ ಸರಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ ಮಾಡಲಾಗಿದೆ. ಈ ಮೂಲಕ ಸರಕಾರ ವಸ್ತ್ರಸಂಹಿತೆ ಜಾರಿಗೆ ತರಲು ಮುಂದಾಗಿದೆ. ಈ ಕುರಿತ ನಿರ್ಧಾರವನ್ನು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಎ.24 ರಂದು ಈ ಯೋಜನೆಗೆ ಚಾಲನೆ ದೊರಕಲಿದೆ.
ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ, ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ಸಭೆ ಮಾಡಲಾಗಿದೆ.
ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು
ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿ, ನೌಕರರು ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸುವುದು.
ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವುದು.
ಖಾದಿ ಗ್ರಾಮೋದ್ಯೋಗ ಮಂಡಳಿಯು ಹಾಲಿ ನೀಡುತ್ತಿರುವ ರಿಯಾಯಿತಿಯ ಹೊರತಾಗಿ ಅಧಿಕಾರಿ, ನೌಕರರಿಗೆ ಶೇ. 5% ಹೆಚ್ಚುವರಿ ರಿಯಾಯಿತಿ ನೀಡುವುದು.
ಪುರುಷ ನೌಕರರು ಖಾದಿ ಬಟ್ಟೆಯ ಶರ್ಟ್,ಪ್ಯಾಂಟ್, ಒವರ್ ಕೋಟ್ ಹಾಗೂ ಇತರೆ ಶಿಸ್ತಿನ ಉಡುಗೆಗಳು.
ಮಹಿಳಾ ನೌಕರರು ಖಾದಿ ಹಾಗೂ ಖಾದಿ ಸಿಲ್ಕ್ ಬಟ್ಟೆಯ ಸೀರೆ, ಚೂಡಿದಾರ್ ಇತರೆ ಶಿಸ್ತಿನ ಉಡುಗೆಗಳು.
ಎಂಎಸ್ಐಎಲ್ ಸಂಸ್ಥೆಯ ಮೂಲಕ ಸೇನಾ ಕ್ಯಾಂಟೀನ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಪೂರೈಸಲು “ಸರ್ಕಾರಿ ನೌಕರರ ಕ್ಯಾಂಟೀನ್” ಪ್ರಾರಂಭಿಸಲು 2026-27ನೇ ಸಾಲಿನ ಆಯ-ವ್ಯಯದಲ್ಲಿ ಈ ಯೋಜನೆಯನ್ನು ಘೋಷಣೆ ಮಾಡುವುದು.
ಕೆಎಸ್ಐಸಿ ಸಂಸ್ಥೆಯು ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳು ಖರೀದಿಸುವ ರೇಷ್ಮೆ ಸೀರೆ ಮತ್ತು ರೇಷ್ಮೆ ವಸ್ತ್ರಗಳಿಗೆ ಹೆಚ್ಚುವರಿ ಶೇ.5% ವಿಶೇಷ ರಿಯಾಯಿತಿ ನೀಡುತ್ತಿರುವ ಮಾದರಿಯಲ್ಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರಿಗೂ ಹೆಚ್ಚುವರಿ ಶೇ. 5% ವಿಶೇಷ ರಿಯಾಯಿತಿ ನೀಡುವುದು.













