ಪುತ್ತೂರು: ಮಾಣಿಲದ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ನಡೆಯುತ್ತಿರುವ 27ನೇ ವರ್ಷದ 48 ದಿನಗಳ ಶ್ರೀ ಮಹಾಲಕ್ಷ್ಮೀ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಅಂಗವಾಗಿ, ಪುತ್ತೂರಿನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿ ನಡೆದಿದೆ.

ಜುಲೈ 12ರಿಂದ ಆ.28ರವರೆಗೆ ಒಂದು ಮಂಡಲದ ಅವಧಿಯಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿವೆ. ಇದರ ಅಂಗವಾಗಿ ಆ.9ರಂದು ಬೆಳಿಗ್ಗೆ 10.30ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ವಿವಿಧ ವಾಹನಗಳಲ್ಲಿ ಬೃಹತ್ ಹೊರೆಕಾಣಿಕೆ ಮೆರವಣಿಗೆ ಮಾಣಿಲ ಶ್ರೀ ಕ್ಷೇತ್ರದತ್ತ ಹೊರಡಲಿದೆ ಕಾರ್ಯಕ್ರಮದ ಗೌರವಾಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ತಿಳಿಸಿದರು.
ಪುತ್ತೂರಿನ ಭಕ್ತಾದಿಗಳಿಂದ ಆ.9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಹೊರೆಕಾಣಿಕೆ ಸಂಗ್ರಹಣಾ ಕಚೇರಿಯು ಆ.6ರ ಬೆಳಿಗ್ಗೆಯಿಂದ ಆ.9ರ ಬೆಳಿಗ್ಗೆಯವರೆಗೆ ಪುತ್ತೂರಿನ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಡಾ. ಸುರೇಶ್ ಮತ್ತೂರಾಯ, ಸೀತಾರಾಮ ರೈ ಕೆದಂಬಾಡಿಗುತ್ತು, ಸಮಿತಿಯ ಅಧ್ಯಕ್ಷ ಕೃಷ್ಣ ಎಂ.ಅಳಿಕೆ, ನವೀನ್ ಕುಲಾಲ್ ಹಾಗೂ ಕುಲಾಲ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕುಲಾಲ್ ಉಪಸ್ಥಿತರಿದ್ದರು.
