ಬೆಂಗಳೂರು ಮಾ.19: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲ ಶಾಖದ ನಡುವೆ ವರುಣ ತಂಪೆರೆದಿದ್ದು, ಧಾರವಾಡ ಸೇರಿ ಹಲವು ಕಡೆ ಆಲಿಕಲ್ಲು ಮಳೆಯ ರಭಸ ಹೆಚ್ಚಿದೆ. ಇದೀಗ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಕೂಡಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಯುಗಾದಿ ಹಬ್ಬದ ತಯಾರಿ ನಡುವೆ ನಿನ್ನೆ ಸಂಜೆ ಬೆಂಗಳೂರಿನಲ್ಲಿ ಮಳೆಯಾಗಿತ್ತು. ಇಂದು ಕೂಡಾ ಮಳೆರಾಯ ತಂಪೆರೆಯಲಿದ್ದಾನೆ. ಕರ್ನಾಟಕದ 9 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆಯನ್ನೂ ಹವಾಮಾನ ಇಲಾಖೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಇಂದು ಗುಡುಗು ಸಹಿತ ಮಳೆ ಸಂಭವ ಹೆಚ್ಚಿದೆ. ಧಾರವಾಡ, ಹಾಸನ, ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ರಸ್ತೆ, ಜಮೀನುಗಳೆಲ್ಲ ಆಲಿಕಲ್ಲು ತುಂಬಿ ಹೋಗಿದೆ. ಇದೀಗ ಇಂದು ಮತ್ತೆ ನಾಳೆ 9 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಂಭವ ಹೆಚ್ಚಿದೆ. ದಾವಣಗೆರೆ, ಯಾದಗಿರಿ, ಬೀದರ್, ಕಲಬುರಗಿ, ಬಳ್ಳಾರಿ, ವಿಜಯಪುರ, ರಾಯಚೂರು, ಶಿವಮೊಗ್ಗ, ವಿಜಯನಗರ ಸೇರಿ 9 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

