ಈದ್ ಉಲ್ ಅದಾ (ಬಕ್ರೀದ್) ಸಂಭ್ರಮಕ್ಕೆ ಕೆಲವೇ ದಿನಗಳು ಬಾಕಿ ಇರುವ ಹೊತ್ತಿನಲ್ಲಿ ಗೋವನ್ನು ‘ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸುವಂತೆ ಹಲವು ಮುಸ್ಲಿಂ ಸಂಘಟನೆಗಳು ಬೇಡಿಕೆ ಇಟ್ಟಿವೆ.


ಬಕ್ರೀದ್ ಹಬ್ಬಕ್ಕೂ ಮುನ್ನ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕೆಂಬ ಜಮಿಯತ್ ಉಲಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ ಒತ್ತಾಯಿಸಿದ್ದು ಇದಕ್ಕೆ ಹಲವಾರು ಪ್ರಮುಖ ಮುಸ್ಲಿಂ ಸಂಘಟನೆಗಳು ಬೆಂಬಲಿಸಿವೆ. ಈ ವಿಷಯದ ಬಗ್ಗೆ ಸಮಾಜವನ್ನು ಒಗ್ಗೂಡಿಸುವ ಉಪಕ್ರಮಗಳಿಗಾಗಿ ಹಲವಾರು ಸಂಘಟನೆಗಳು ಇದನ್ನು ಬೆಂಬಲಿಸಿವೆ. ಇನ್ನು ಕೆಲವು ಸಂಘಟನೆಗಳು ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಲು ಉದ್ದೇಶಿಸಿವೆ.
ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವುದರಿಂದ ಹಸುವಿನ ಹೆಸರಿನಲ್ಲಿ ನಡೆಯುವ ಹಿಂಸಾಚಾರ ಮತ್ತು ರಾಜಕೀಯ ವಿವಾದಗಳಿಗೆ ಶಾಶ್ವತ ಪರಿಹಾರ ಸಿಗುತ್ತದೆ ಎಂದು ಮೌಲಾನಾ ಅರ್ಷದ್ ಅಭಿಪ್ರಾಯಪಟ್ಟಿದ್ದಾರೆ. ಗೋ ಮಾಂಸ ಸೇವನೆ ವಿಚಾರದಲ್ಲಿ ಗುಂಪು ಹತ್ಯೆ ಮತ್ತು ಹಿಂಸಾಚಾರ ನಡೆಯುವುದನ್ನೂ ತಡೆಯಲು ಈ ಕ್ರಮ ಮುಖ್ಯ ಎಂದಿದ್ದಾರೆ.
ಈ ವಿಷಯವಾಗಿ ಶೀಘ್ರದಲ್ಲೇ ದಿಲ್ಲಿಯಲ್ಲಿ ಪ್ರಮುಖ ಮುಸ್ಲಿಂ ಸಂಘಟನೆಗಳ ಪ್ರತಿನಿಧಿಗಳ ಸಭೆ ನಡೆಯಲಿದ್ದು, ಅದರಲ್ಲಿ ಮನವಿ ಪತ್ರವೊಂದನ್ನು ಸಿದ್ಧಪಡಿಸಲಾಗುವುದು. ತರುವಾಯ ಅದನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲಿಸಲು ಮುಸ್ಲಿಂ ಸಂಘಟನೆಗಳು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.

