ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ‘ಸಂಸದ್ ಚಲೋ’ ಪ್ರತಿಭಟನೆ ವೇಳೆ ದೆಹಲಿ ಪೊಲೀಸರ ಲಾಠಿಚಾರ್ಜ್ ಮತ್ತು ಬಲಪ್ರಯೋಗದ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದಲ್ಲದೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಈ ಕುರಿತ ಅರ್ಜಿಯ ತುರ್ತು ವಿಚಾರಣೆಗೆ ನಕಾರ ವ್ಯಕ್ತಪಡಿಸಿದೆ.
ಆಶ್ಚರ್ಯ ಅಂದ್ರೆ ಅರ್ಜಿದಾರ ವಕೀಲರು ಪೊಲೀಸರ ಕೃತ್ಯವನ್ನು ಸಾಬೀತುಪಡಿಸಲು ವಿಡಿಯೋ ಸಾಕ್ಷ್ಯಗಳನ್ನು ಸಲ್ಲಿಸಲು ಮುಂದಾದಾಗ, ನಮ್ಮ ಸಮಯವನ್ನೂ ವ್ಯರ್ಥ ಮಾಡಬೇಡಿ, ನಿಮ್ಮ ಸಮಯವನ್ನೂ ಹಾಳು ಮಾಡಿಕೊಳ್ಳಬೇಡಿ ಎಂದು ಸಿಜೆಐ ಎಚ್ಚರಿಸಿದ್ದಾರೆ.
ರಾಜಧಾನಿಯ ಜಂತರ್ ಮಂತರ್ ಪ್ರದೇಶದಲ್ಲಿ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಅತಿಯಾದ ಬಲಪ್ರಯೋಗ ಹಾಗೂ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ವಕೀಲರೊಬ್ಬರು ಸುಪ್ರೀಂ ಕೋರ್ಟ್ನಲ್ಲಿ ತಕ್ಷಣದ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದರು. ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಪ್ರಸ್ತಾಪಿಸಿ, ಈ ವಿಚಾರದಲ್ಲಿ ನ್ಯಾಯಪೀಠವು ತಕ್ಷಣವೇ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಲಾಗಿತ್ತು.
ಆದರೆ ಈ ಮನವಿಯನ್ನು ಪರಿಗಣಿಸಲು ಸಂಪೂರ್ಣವಾಗಿ ನಿರಾಕರಿಸಿದ ಸುಪ್ರೀಂ ಕೋರ್ಟ್, ಅನಗತ್ಯವಾಗಿ ಈ ರೀತಿ ಅರ್ಜಿಗಳನ್ನು ತಂದು ನ್ಯಾಯಾಲಯದ ಅಮೂಲ್ಯ ಸಮಯವನ್ನು ಹಾಳುಮಾಡಬಾರದು ಎಂದು ಸ್ಪಷ್ಟಪಡಿಸಿತು. ಸೂಕ್ತ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸದೆ ನೇರವಾಗಿ ಉನ್ನತ ನ್ಯಾಯಾಲಯಕ್ಕೆ ಬಂದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠವು, ವಿಚಾರಣೆಗೆ ತುರ್ತು ಪ್ರಾಶಸ್ತ್ಯ ನೀಡಲು ಒಪ್ಪಲಿಲ್ಲ.
ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆ ಮತ್ತು ಅದಕ್ಕೆ ಸಂಬಂಧಿಸಿದಂತೆ ಪೊಲೀಸರು ಕೈಗೊಂಡ ಕ್ರಮಗಳು ಪ್ರಸ್ತುತ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಸುಪ್ರೀಂ ಕೋರ್ಟ್ನ ಈ ಕಠಿಣ ನಿಲುವಿನಿಂದಾಗಿ ಅರ್ಜಿದಾರರಿಗೆ ಹಿನ್ನಡೆಯಾಗಿದೆ.
ಈ ಅರ್ಜಿಯಲ್ಲಿ ದೆಹಲಿಯ ಜಂತರ್ ಮಂತರ್ನಿಂದ ಸಂಸತ್ ಭವನದವರೆಗೆ ನಡೆದ ‘ಸಂಸತ್ ಚಲೋ’ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಮನವಿ ಮಾಡಲಾಗಿತ್ತು. ಸುಪ್ರೀಂ ಕೋರ್ಟ್ನ ಈ ನಿರ್ಧಾರಕ್ಕೂ ಒಂದು ದಿನ ಮೊದಲು ದೆಹಲಿ ಹೈಕೋರ್ಟ್ ಕೂಡ ಇದೇ ರೀತಿಯ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ನಿರಾಕರಿಸಿತ್ತು. ಹೈಕೋರ್ಟ್, “ನ್ಯಾಯಾಲಯವನ್ನು ಈ ವಿಷಯಕ್ಕೆ ಎಳೆಯಬೇಡಿ” ಎಂದು ಹೇಳಿತ್ತು.

