ಉಡುಪಿ ಜಿಲ್ಲೆಯ ಕಾರ್ಕಳದ ಪ್ರಸಿದ್ಧ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಶಾಸಕ ಹಾಗೂ ಮಾಜಿ ಸಚಿವ ವಿ.ಸುನಿಲ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹ ಮಾಡಿ ಕಾಂಗ್ರೆಸ್ ಹಾಗೂ ಬಿಜೆಪಿಯ ನೂರಾರು ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ಮಾಡಿದ ಘಟನೆ ಬುಧವಾರ ನಡೆದಿದೆ.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಸಚಿವ ನಾಗೇಂದ್ರ ಅವರ ರಾಜೀನಾಮೆಯನ್ನು ಉಲ್ಲೇಖಿಸಿ, ಪರಶುರಾಮ ಥೀಮ್ ಪಾರ್ಕ್ ಹಗರಣದ ನೈತಿಕ ಹೊಣೆ ಹೊತ್ತು ಸುನಿಲ್ ಕುಮಾರ್ ರಾಜೀನಾಮೆ ನೀಡಬೇಕೆಂದು ಆಗ್ರಹ ಮಾಡಲಾಯಿತು.
ಶಾಸಕರ ಕಚೇರಿಯತ್ತ ಧಾವಿಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಸರ್ವಜ್ಞ ವೃತ್ತದ ಬಳಿ ತಡೆದು ವಶಕ್ಕೆ ಪಡೆದಿದ್ದು, ಈ ವೇಳೆ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.
ಶಾಸಕರ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಕಾರ್ಯಕರ್ತರು ತಹಶೀಲ್ದಾರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದು, ಎರಡು ಪಕ್ಷಗಳ ಕಾರ್ಯಕರ್ತರು ಶಾಸಕರ ಕಚೇರಿ ಸುತ್ತಮುತ್ತ ಮುಖಾಮುಖಿಯಾಗಿದ್ದರಿಂದ ಬಿಗುವಿನ ವಾತಾವರಣ ಉಂಟಾಯಿತು.
ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

