ಇರಾನ್ನ ಪರಮೋಚ್ಚ ಧಾರ್ಮಿಕ ನಾಯಕ ಆಯತೊಲ್ಲಾ ಖಮೇನಿ ಅವರ ಅಂತ್ಯಕ್ರಿಯೆಯ ಪ್ರಕ್ರಿಯೆಗಳು ನಡೆಯುತ್ತಿವೆ. ಇದರಲ್ಲಿ ಭಾಗವಹಿಸಲು ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಿಂದ 20 ರಿಂದ 25 ಮಂದಿ ಇರಾನ್ಗೆ ತೆರಳಿದ್ದಾರೆ.

ಮಧ್ಯಾಹ್ನ 3 ಗಂಟೆಯ ನಂತರ ಖಮೇನಿ ಅಂತ್ಯಕ್ರಿಯೆ ನಡೆಯಲಿದೆ. ಇದೇ ವೇಳೆ ಅಲೀಪುರ ಗ್ರಾಮದಲ್ಲೂ ಅಂತ್ಯಕ್ರಿಯೆಯ ನೇರ ಪ್ರಸಾರ ವೀಕ್ಷಣೆಗೆ ವಿಶೇಷ ಸಿದ್ಧತೆ ಮಾಡಲಾಗಿದೆ. ಗ್ರಾಮದಲ್ಲಿ ಬೃಹತ್ ಎಲ್ಇಡಿ ಪರದೆಗಳನ್ನು ಅಳವಡಿಸಿ ಅಂತ್ಯಕ್ರಿಯೆಯ ನೇರ ಪ್ರಸಾರ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.
ಅಲೀಪುರ-ಇರಾನ್ ಬಾಂಧವ್ಯ
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಅಲೀಪುರವು ಈ ಹಿಂದೆ ‘ಬೆಳ್ಳಿಕುಂಟೆ’ ಎಂದು ಕರೆಯಲ್ಪಡುತ್ತಿತ್ತು. ಈ ಗ್ರಾಮವು ಬಿಜಾಪುರದ ಆದಿಲ್ಶಾಹಿಗಳ ಕಾಲದಲ್ಲಿ ವಲಸೆ ಬಂದವರಿಂದ ‘ಅಲೀಪುರ’ವಾಗಿ ರೂಪಾಂತರಗೊಂಡಿತು ಎನ್ನುವುದು ಇತಿಹಾಸ.
ಗ್ರಾಮದ ಪ್ರತಿಯೊಬ್ಬರಿಗೂ ಇರಾನ್ ಮತ್ತು ಅರಬ್ ದೇಶಗಳೊಂದಿಗೆ ವ್ಯಾಪಾರ ಹಾಗೂ ಶಿಕ್ಷಣದ ಗಾಢ ಸಂಬಂಧವಿದೆ. ಅಲೀಪುರದ ಶಿಯಾ ಮುಸ್ಲಿಮರಿಗೆ ಇರಾನ್ ಅಚ್ಚುಮೆಚ್ಚಿನ ತಾಣವಾಗಿದೆ. 20 ಸಾವಿರ ಜನಸಂಖ್ಯೆಯ ಅಲೀಪುರದಲ್ಲಿ ಶಿಯಾ ಮುಸ್ಲಿಮರೇ ಹೆಚ್ಚಿದ್ದಾರೆ. ಇಲ್ಲಿನ ಜನರು ಅಯಾತೊಲ್ಲಾ ಖಮೇನಿ ಧಾರ್ಮಿಕ ಆದೇಶಗಳನ್ನು ಪಾಲಿಸುತ್ತಿದ್ದರು. ಇಲ್ಲಿನ ಜನರಿಗೆ ಖಮೇನಿ ಧರ್ಮಗುರುವಾಗಿದ್ರು. ಖಮೇನಿ ತತ್ವ ಪಾಲಿಸುವ ದೊಡ್ಡ ಬಳಗವೇ ಇಲ್ಲಿದೆ.
1986ರಲ್ಲಿ ಅಲೀಪುರಕ್ಕೆ ಖಮೇನಿ ಭೇಟಿ
ಈ ಭೇಟಿಯೇ ಇರಾನ್ ಮತ್ತು ಅಲೀಪುರದ ನಡುವಿನ ಬಾಂಧವ್ಯವನ್ನು ಸಾರುತ್ತದೆ. ಇರಾನ್ ಧಾರ್ಮಿಕ ನಾಯಕ ಹಾಗೂ ಅಯಾತೊಲ್ಲಾ ಅಲಿ ಖಮೇನಿ ಅವರ ಗುರು ಅಯಾತೊಲ್ಲಾ ಇಮಾಮ್ ಖಮೇನಿ ಅವರ ಹೆಸರಿನಲ್ಲಿ ಗ್ರಾಮದಲ್ಲಿ ಆಸ್ಪತ್ರೆ ಸಹ ನಿರ್ಮಾಣವಾಗಿದೆ. ಈ ಆಸ್ಪತ್ರೆಯ ಉದ್ಘಾಟನೆಗಾಗಿಯೇ ಅಯಾತೊಲ್ಲಾ ಅಲಿ ಖಮೇನಿ ಅಲೀಪುರಕ್ಕೆ ಬಂದಿದ್ದರು.
ವೈದ್ಯಕೀಯ ಶಿಕ್ಷಣ, ಧಾರ್ಮಿಕ ಶಿಕ್ಷಣ, ಧಾರ್ಮಿಕ ಪ್ರವಾಸದ ಕಾರಣಕ್ಕೆ ಅಲೀಪುರದ ಶಿಯಾ ಮುಸ್ಲಿಮರು ಪ್ರಮುಖವಾಗಿ ಇರಾನ್ ಅವಲಂಬಿಸಿದ್ದಾರೆ. 20 ಸಾವಿರ ಜನಸಂಖ್ಯೆಯ ಅಲೀಪುರದಲ್ಲಿ ಶಿಯಾ ಮುಸ್ಲಿಮರದ್ದೇ ಪ್ರಾಬಲ್ಯ. ‘ಇರಾನ್’ ನಮ್ಮ ಧಾರ್ಮಿಕ ಭೂಮಿ ಎನ್ನುವ ಪೂಜ್ಯ ಭಾವನೆ ಇಲ್ಲಿನ ಜನರದ್ದು. ಇರಾನ್ನ ಪರಮೋಚ್ಛನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರ ಧಾರ್ಮಿಕ ಆದೇಶಗಳನ್ನು ಪಾಲಿಸುವ ದೊಡ್ಡ ಜನ ವರ್ಗವೇ ಇಲ್ಲಿದೆ.

