ರಾಜ್ಯದಲ್ಲಿ ಸಿಎಂ ಹುದ್ದೆ ಬದಲಾವಣೆಯ ಜೊತೆ ಜೊತೆಗೆ ಸಚಿವ ಸಂಪುಟದಲ್ಲಿ ಯಾರೆಲ್ಲ ಇರಬೇಕು ಎನ್ನುವುದು ಮತ್ತು ಇತರ ಪ್ರಮುಖ ರಾಜಕೀಯ ನಿರ್ಧಾರಗಳ ಕುರಿತು ಚರ್ಚೆ ಮಾಡಲು ನಿರ್ಗಮಿತ ಸಿಎಂ ಸಿದ್ದರಾಮಯ್ಯ ಹಾಗೂ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಜೂ 1) ದೆಹಲಿಗೆ ತೆರಳುತ್ತಿದ್ದಾರೆ. ಸಂಭಾವ್ಯ ಸಚಿವರ ಪಟ್ಟಿ ಅಂತಿಮ ಮಾಡಲು ಹೈಕಮಾಂಡ್ ನಾಯಕರ ಜೊತೆ ಚರ್ಚೆ ಮಾಡಲು ಈ ಭೇಟಿ.


ಇದೇ ವೇಳೆ ಸಿದ್ದರಾಮಯ್ಯ ಅವರ ಪತ್ನಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಸಭಾ ಸ್ಥಾನದ ಆಫರ್ ನೀಡಿದ್ದರು ಎನ್ನುವ ಕುರಿತು ಮಾಧ್ಯಮವೊಂದು ವರದಿ ಮಾಡಿದೆ. ದೆಹಲಿ ರಾಜಕಾರಣಕ್ಕೆ ಸಿದ್ದರಾಮಯ್ಯ ಬರಲು ಸಾಧ್ಯವಾಗದಿದ್ದರೆ, ಅವರ ಪತ್ನಿಯನ್ನು ರಾಜ್ಯಸಭೆಗೆ ಕಳುಹಿಸಿಕೊಡುವಂತೆ ರಾಹುಲ್ ಗಾಂಧಿ ಗೌರವಯುತ ಆಫರನ್ನು ನೀಡಿದ್ದರು. ಆದರೆ ಇದನ್ನು ನಯವಾಗಿಯೇ ನಿರಾಕರಣೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ನಾನು ರಾಜ್ಯ ರಾಜಕಾರಣದಲ್ಲಿಯೇ ಮುಂದುವರಿಯುತ್ತೇನೆ. ನನ್ನ ಪತ್ನಿ ಎಂದಿಗೂ ರಾಜಕೀಯದಲ್ಲಿ ಇಲ್ಲ, ಆಕೆ ಹೊರಜಗತ್ತಿಗೂ ಬಂದಿಲ್ಲ. ಹೀಗಾಗಿ ಆಕೆ ರಾಜ್ಯಸಭೆ ಪ್ರವೇಶಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಇದರ ಜೊತೆಗೆ ಪುತ್ರ ಯತೀಂದ್ರಗೆ ಡಿಸಿಎಂ ಪಟ್ಟವನ್ನೂ ಸಿದ್ದರಾಮಯ್ಯ ನಿರಾಕರಣೆ ಮಾಡಿದ್ದಾರೆ. 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಹಾಗೂ ಮುಖ್ಯಮಂತ್ರಿ ರೇಸ್ನಲ್ಲಿದ್ದ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್, ಲಿಂಗಾಯತ ಸಮುದಾಯದ ಪ್ರಮುಖ ನಾಯಕ ಎಂ.ಬಿ.ಪಾಟೀಲ್, ಅಲ್ಪಸಂಖ್ಯಾತ ಸಮುದಾಯದ ಜಮೀರ್ ಅಹಮದ್ ಖಾನ್ ಅವರಿಗೆ ಡಿಸಿಎಂ ಪಟ್ಟ ನೀಡಲು ಸಿದ್ದರಾಮಯ್ಯ ಹೈಕಮಾಂಡ್ ಮಟ್ಟದಲ್ಲಿ ಪ್ರಸ್ತಾವನೆ ಮಾಡಲಿದ್ದಾರೆ.
