ಹಿರಿಯ ಕಾಂಗ್ರೆಸ್ ನಾಯಕ, ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಇದೀಗ ವಾಪಸ್ ತೆಗೆದುಕೊಂಡಿರುವ ಘಟನೆ ನಡೆದಿದೆ. ಅಲ್ಲಿಗೆ ಸಿಎಂ ಡಿಕೆ ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರಾಮಲಿಂಗಾರೆಡ್ಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆಯನ್ನು ನೀಡಿದ್ದಾರೆ.


ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ರಾಮಲಿಂಗಾರೆಡ್ಡಿ ಮತ್ತು ಕೃಷ್ಣ ಭೈರೇಗೌಡ ಜೊತೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇಂದು ಚರ್ಚೆ ಮಾಡಿದ್ದಾರೆ. ಸುಮಾರು 1 ಗಂಟೆ ಕಾಲ ಸಮಾಲೋಚನೆ ಮಾಡಲಾಗಿದೆ. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆ ವಾಪಸ್ ಪಡೆದುಕೊಂಡಿದ್ದಾರೆ. ಅವರು ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.
ರಾಮಲಿಂಗಾರೆಡ್ಡಿ ಪಕ್ಷದ ಹಿರಿಯ ನಾಯಕರು. ಹಲವು ಸಲ ಸಚಿವರಾಗಿ ಕೆಲಸ ಮಾಡಿದ್ದಾರೆ. ಸಿಎಂ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅವರು ಕಾಂಗ್ರೆಸ್ ಆಸ್ತಿ. ಅವರು ರಾಜೀನಾಮೆ ನೀಡಿದ ಬಳಿಕ ನಾವು ಮಾತಾಡಿದ್ದೇವೆ. ಸ್ವಲ್ಪ ತಪ್ಪು ತಿಳುವಳಿಕೆ ಆಗಿತ್ತು. ಇದೀಗ ರಾಜೀನಾಮೆ ವಾಪಸ್ ಪಡೆದಿದ್ದಾರೆ ಎಂದು ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.
ಇನ್ನು ರಾಮಲಿಂಗಾರೆಡ್ಡಿಗೆ ಹೆಚ್ಚುವರಿ ಖಾತೆ ನೀಡುವುದಾಗಿ ಹೈಕಮಾಂಡ್ ಭರವಸೆ ಬೆನ್ನಲ್ಲೇ ರಾಜೀನಾಮೆ ವಾಪಸ್ಗೆ ತೀರ್ಮಾನಿಸಲಾಗಿದೆ. ಹೀಗಾಗಿ ರಾಮಲಿಂಗಾರೆಡ್ಡಿ ಇಂದೇ ಅಧಿಕೃತವಾಗಿ ರಾಜೀನಾಮೆ ವಾಪಸ್ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

