ಶೈಕ್ಷಣಿಕ ವರ್ಷ ಆರಂಭವಾಗಿ 18 ದಿನಗಳು ಕಳೆದಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯ 20 ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ವಿದ್ಯಾರ್ಥಿಯೂ ದಾಖಲಾಗಿಲ್ಲ. ಇದು ಅಪಾಯಕಾರಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಅಲ್ಲದೆ ದಾಖಲಾತಿ ನಡೆದಿರುವ ಅನೇಕ ಸರ್ಕಾರಿ ಶಾಲೆಗಳಲ್ಲಿಯೂ ವಿದ್ಯಾರ್ಥಿಗಳ ಸಂಖ್ಯೆ ಅತ್ಯಂತ ಕಡಿಮೆಯಾಗಿರುವುದು ಆತಂಕಕಾರಿಯಾಗಿದೆ ಎಂದು ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಕಳವಳ ವ್ಯಕ್ತಪಡಿಸಿದ್ದಾರೆ.


ಸರ್ಕಾರಿ ಶಾಲೆಗಳ ಮೇಲಿನ ಜನರ ವಿಶ್ವಾಸ ಕುಸಿಯುತ್ತಿರುವುದು, ಮೂಲ ಸೌಕರ್ಯಗಳ ಕೊರತೆ, ಶಿಕ್ಷಕರ ಅಭಾವ, ಗುಣಮಟ್ಟದ ಶಿಕ್ಷಣದ ಬಗ್ಗೆ ಮೂಡಿರುವ ಅನುಮಾನ ಹಾಗೂ ಖಾಸಗಿ ಶಾಲೆಗಳತ್ತ ಹೆಚ್ಚುತ್ತಿರುವ ಒಲವು ಇಂತಹ ಪರಿಸ್ಥಿತಿಗೆ ಕಾರಣವಾಗಿದೆ. ಇದು ಸರ್ಕಾರಿ ಶಿಕ್ಷಣ ವ್ಯವಸ್ಥೆಯ ದುಸ್ಥಿತಿಯನ್ನು ಬಿಂಬಿಸುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸರ್ಕಾರಿ ಶಾಲೆಗಳು ಮುಚ್ಚುವ ಅಪಾಯವನ್ನೂ ಸೃಷ್ಟಿಸಬಹುದು ಎಂದರು
ಅಲ್ಲದೆ ಶಿಕ್ಷಣವು ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕಾಗಿದ್ದು, ಸರ್ಕಾರಿ ಶಾಲೆಗಳು ಸಮಾಜದ ಬಡ ಮತ್ತು ಮಧ್ಯಮ ವರ್ಗದ ಮಕ್ಕಳ ಭವಿಷ್ಯದ ಆಧಾರವಾಗಿವೆ. ಆದ್ದರಿಂದ ಸರ್ಕಾರ ಈ ಗಂಭೀರ ಪರಿಸ್ಥಿತಿಯನ್ನು ನಿರ್ಲಕ್ಷಿಸದೆ ತಕ್ಷಣ ಕ್ರಮ ಕೈಗೊಂಡು ಸರ್ಕಾರಿ ಶಾಲೆಗಳ ಉಳಿವು ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
