ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಹೀಗಾಗಿ ಬಿಜೆಪಿಯಲ್ಲಿ ಯಾರು ಅಡ್ಡ ಮತದಾನ ಮಾಡಿದ್ದಾರೆ ಎಂಬುದನ್ನು ಕಂಡುಹಿಡಿಯಲು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಾಸಕರಿಂದ ಆಣೆ -ಪ್ರಮಾಣ ಮಾಡಿಸಲು ರಾಜ್ಯ ಬಿಜೆಪಿ ಮುಂದಾಗಿತ್ತು. ಆದರೆ ಇದೀಗ ಈ ಬಗ್ಗೆ ಬಾರಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡುವುದನ್ನು ಬಿಜೆಪಿ ಕೈ ಬಿಟ್ಟಿದೆ.

ಪಕ್ಷದ ಹಿರಿಯ ಶಾಸಕರು ಹಾಗೂ ನಾಯಕರಿಂದ ವ್ಯಕ್ತವಾದ ತೀವ್ರ ವಿರೋಧದ ಬೆನ್ನಲ್ಲೇ ಆಣೆ ಪ್ರಮಾಣಕ್ಕೆ ಬ್ರೇಕ್ ಬಿದ್ದಿದ್ದು ಧರ್ಮಸ್ಥಳದಲ್ಲಿ(Dharmasthala) ನಡೆಸಲು ಉದ್ದೇಶಿಸಿದ್ದ ಶಾಸಕಾಂಗ ಪಕ್ಷದ ಸಭೆಯನ್ನೂ ರದ್ದುಗೊಳಿಸಲಾಗಿದೆ.
ಅಡ್ಡ ಮತದಾನದ ಬಗ್ಗೆ ಚರ್ಚಿಸಲು ವಿರೋಧ ಪಕ್ಷದ ನಾಯಕರದ ಆರ್ ಅಶೋಕ ಅವರು ಇಂದು ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ಆಗಮಿಸಿದ್ದರು. ಈ ವೇಳೆ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು ಚರ್ಚಿಸಿದ್ದರು. ಆದರೆ, ನಾನು ಪಕ್ಷದ ಹಿರಿಯ ನಾಯಕರೊಂದಿಗೆ ಈ ಬಗ್ಗೆ ಸಮಾಲೋಚನೆ ನಡೆಸಿದಾಗ, ಬಹುತೇಕ ಶಾಸಕರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಇಂತಹ ರಾಜಕೀಯ ಬೆಳವಣಿಗೆಗಳು ಮೊದಲ ಬಾರಿಗೆ ಆಗುತ್ತಿಲ್ಲ. ಪವಿತ್ರ ಕ್ಷೇತ್ರವಾದ ಧರ್ಮಸ್ಥಳವನ್ನು ಇಂತಹ ರಾಜಕೀಯ ವಿಚಾರಗಳಿಗೆ ಎಳೆದು ತರುವುದು ಬೇಡ ಎಂದು ಒಮ್ಮತದಿಂದ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
