ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದ ತಂತ್ರಗಾರಿಕೆಗೆ ಮಣಿದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಕೆಲವು ಶಾಸಕರು ಅಡ್ಡ ಮತದಾನ ಮಾಡಿರುವುದು ಈಗ ದೋಸ್ತಿ ಪಾಳಯದಲ್ಲಿ ತೀವ್ರ ಆಕ್ರೋಶ ಹಾಗೂ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಬಿಜೆಪಿಯಲ್ಲಿ ಯಾರೂ ಅಡ್ಡ ಮತದಾನ ಮಾಡಿದ್ದಾರೆ ಎಂಬುದನ್ನು ಕಂಡುಹಿಡಿಯಲು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಾಸಕರಿಂದ ಆಣೆ -ಪ್ರಮಾಣ ಮಾಡಿಸಲು ರಾಜ್ಯ ಬಿಜೆಪಿ ಮುಂದಾಗಿದೆ ಎಂದು ವಾರದಿಯಾಗಿದೆ.


ಇದೇ ಗುರುವಾರ ಅಥವಾ ಶುಕ್ರವಾರದಂದು ಧರ್ಮಸ್ಥಳದಲ್ಲೇ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನಿಸಲಾಗಿದ್ದು, ಸಭೆಯ ನಂತರ ಎಲ್ಲ 63 ಶಾಸಕರಿಂದಲೂ “ನಾವು ಅಡ್ಡ ಮತದಾನ ಮಾಡಿಲ್ಲ” ಎಂದು ಮಂಜುನಾಥನ ಸನ್ನಿಧಿಯಲ್ಲಿ ಪ್ರಮಾಣ ಮಾಡಿಸಲಾಗುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(BY Vijayendra) ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಅವರೊಂದಿಗೆ ದೂರವಾಣಿ ಮೂಲಕ ಸುದೀರ್ಘ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
“ನಾನು ಪಕ್ಷಕ್ಕೆ ದ್ರೋಹ ಬಗೆದಿಲ್ಲ, ಅಡ್ಡ ಮತದಾನ ಮಾಡಿಲ್ಲ” ಎಂದು ಶಾಸಕರಿಂದ ದೇವರ ಮುಂದೆ ಪ್ರಮಾಣ ಮಾಡಿಸುವ ಮೂಲಕ ಸತ್ಯವನ್ನು ಹೊರತೆಗೆಯುವುದು ನಾಯಕರ ಪ್ಲಾನ್ ಆಗಿದೆ. ಕರ್ನಾಟಕದ ಸಾಂಸ್ಕೃತಿಕ ಮತ್ತು ಧಾರ್ಮಿಕ ಹಿನ್ನೆಲೆಯಲ್ಲಿ ಧರ್ಮಸ್ಥಳದ ಆಣೆ ಪ್ರಮಾಣಕ್ಕೆ ಜನಮಾನಸದಲ್ಲಿ ಅತ್ಯಂತ ಪವಿತ್ರ ಹಾಗೂ ಭಯಭಕ್ತಿಯ ಸ್ಥಾನವಿದೆ. ರಾಜಕೀಯವಾಗಿ ಎಷ್ಟೇ ಚಾಣಾಕ್ಷತನ ಪ್ರದರ್ಶಿಸಿದರೂ, ದೇವರ ಸನ್ನಿಧಿಯಲ್ಲಿ ಸುಳ್ಳು ಹೇಳಲು ಶಾಸಕರು ಹಿಂಜರಿಯುತ್ತಾರೆ ಎಂಬುದು ಪಕ್ಷದ ನಾಯಕರ ನಂಬಿಕೆ. ಈ ವಿಶಿಷ್ಟ ತಂತ್ರದ ಮೂಲಕ ಕ್ರಾಸ್ ವೋಟಿಂಗ್ ಮಾಡಿದ “ಕೈ” ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಬಹುದು ಎಂಬುದು ಮೈತ್ರಿ ನಾಯಕರ ಲೆಕ್ಕಾಚಾರವಾಗಿದೆ.
ಧರ್ಮಸ್ಥಳದ ಆಣೆ-ಪ್ರಮಾಣದ ಪ್ರಕ್ರಿಯೆಗೆ ಚಾಲನೆ ನೀಡುವ ಮುನ್ನ ಬಿ.ವೈ. ವಿಜಯೇಂದ್ರ ಮತ್ತು ಆರ್. ಅಶೋಕ್ ಅವರು ಸೋಮವಾರ ಸಂಜೆ ಇಬ್ಬರೂ ಜಂಟಿಯಾಗಿ ದೆಹಲಿಗೆ ಪ್ರಯಾಣ ಬೆಳೆಸಿ ಹೈಕಮಾಂಡ್ ನಾಯಕರಿಗೆ ವರದಿ ಸಲ್ಲಿಸಲಿದ್ದಾರೆ.

