ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ಕಿಡಿ ಈಗ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಭಾರಿ ಬಿರುಗಾಳಿಯನ್ನೇ ಎಬ್ಬಿಸಿದೆ. ಅಡ್ಡ ಮತದಾನದ ಬಗ್ಗೆ ರಿಪೋರ್ಟ್ ನೀಡಿ ಇದೀಗ ರಾಜ್ಯನಾಯಕರು ಮರಳಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇದರ ಬೆನ್ನಲ್ಲೇ ಅಡ್ಡ ಮತದಾನ ಮಾಡಿದ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗುತ್ತದೆ ಎಂಬ ಗುಸು-ಗುಸು ಶುರುವಾಗಿದೆ.

ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರನ್ನು ಭೇಟಿ ಮಾಡಿದ ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಉಸ್ತುವಾರಿ ಡಾ.ಮೋಹನ್ ಅಗರ್ ವಾಲ್, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವಿಧಾನಮಂಡಲದ ಉಭಯ ಸದನಗಳ ಮುಖ್ಯ ಸಚೇತಕರಾದ ದೊಡ್ಡನಗೌಡ ಪಾಟೀಲ್ ಹಾಗೂ ಎನ್.ರವಿಕುಮಾರ್ ಅವರುಗಳು ಭೇಟಿ ಮಾಡಿ ರಾಜ್ಯದ ವಸ್ತು ಸ್ಥಿತಿಯನ್ನು ವಿವರಿಸಿದ್ದಾರೆ. ಈ ವೇಳೆ ಅವರು ಅಡ್ಡ ಮತದಾನ ಮಾಡಿದ ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಛಾಟಿಸುವಂತೆ ರಾಷ್ಟ್ರೀಯ ನಾಯಕರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಇನ್ನೂ ಈ ಪ್ರಕರಣ ಕುರಿತು ವಿಧಾನ ಪರಿಷತ್ ಸದಸ್ಯರಾದ ಸಿ.ಟಿ .ರವಿ ನೇತೃತ್ವದಲ್ಲಿ ಮೂವರ ತಂಡವನ್ನು ರಚಿಸಿದೆ. ಸಮಿತಿಯೂ ಇದೇ 25ರಂದು ವರದಿ ನೀಡಲಿದ್ದು ಕೆಲವು ಅನುಮಾನಾಸ್ಪದ ಶಾಸಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ರಾಜ್ಯ ಘಟಕ ಒತ್ತಾಯ ಮಾಡಿದೆ.
