ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ ಕೆಳಗಿಳಿಸಲು ಡಿವಿ ಸದಾನಂದ ಗೌಡ ದೆಹಲಿ ನಾಯಕರಲ್ಲಿ ಒತ್ತಾಯ ಮಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗುತ್ತಿದೆ. ಬಿಜೆಪಿ ಪಾಳಯದಲ್ಲಿ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಬಿಜೆಪಿ ದೆಹಲಿ ಮಟ್ಟದ ನಾಯಕ ಪ್ರದೀಪ್ ಎಂಬುವವರ ಜೊತೆಗೆ ಇಂಗ್ಲಿಷ್ ಭಾಷೆಯಲ್ಲಿ ನಡೆಸಿದ ಸಂಭಾಷಣೆ ಇದಾಗಿದೆ. ಇದರಲ್ಲಿ ಮೂರು ತಿಂಗಳ ಬಳಿಕ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಿ ಎಂದು ಬೇಡಿಕೆ ಇಡಲಾಗಿದೆ. ಮಾತನಾಡಿರುವುದು ಸದಾನಂದ ಗೌಡರು ಎನ್ನಲಾಗುತ್ತಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಬೆಳವಣಿಗೆ ಬಿಜೆಪಿಯೊಳಗೆ ಅಸಮಾಧಾನಕ್ಕೆ ಕಾರಣವಾಗಿದ್ದ ಬೆನ್ನಲ್ಲೇ ಈ ಆಡಿಯೋ ವೈರಲ್ ಆಗಿರುವುದು ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತು ಮತ್ತೊಮ್ಮೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಏನಿದೆ ಆಡಿಯೋದಲ್ಲಿ?
ಬಿವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಮೂರು ವರ್ಷ ಪೂರ್ಣಗೊಳಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಗೊಂದಲ ಮಾಡಿಕೊಳ್ಳುವುದು ಯಾಕೆ? ಎರಡು ತಿಂಗಳ ಒಳಗಾಗಿ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕಾಗಿದೆ. ಎರಡು ತಿಂಗಳಲ್ಲಿ ಅವರ ಅವಧಿ ಕೂಡಾ ಮುಕ್ತಾಯವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯಾರೂ ಇದನ್ನು ಪ್ರಶ್ನೆ ಮಾಡುವುದಿಲ್ಲ.
ಪಕ್ಷದಲ್ಲಿ ಮುಂದುವರಿಯಬೇಕೆಂದು ಯಾವುದೇ ಷರತ್ತು ಇಲ್ಲ. ಹಾಗಾಗಿ ಯೋಜನಾಬದ್ಧವಾಗಿ ಅಕ್ಟೋಬರ್ನಲ್ಲಿ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ. ಈ ಕೆಲಸ ಮಾಡಿದರೆ, ಲಿಂಗಾಯತರು ಸ್ವಲ್ಪ ವಿರೋಧ ಮಾಡಬಹುದು. ಆದರೆ ಯೋಗ್ಯರನ್ನು ನಾವು ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ ಎಲ್ಲಾ ವಿರೋಧಗಳು ತಣ್ಣಗಾಗಲಿದೆ. ಇದು ನನ್ನ ಅಭಿಪ್ರಾಯವಾಗಿದೆ.
ಬೇರೆ ಉತ್ತಮ ಅವಕಾಶಗಳು ಇದ್ದರೆ ನಾನು ಪಕ್ಷದ ನಿರ್ಧಾರಕ್ಕೆ ಬದ್ಧವಾಗಿದ್ದೇನೆ. ನಾನು ದೇವರಲ್ಲಿ ನಂಬಿಕೆ ಇಟ್ಟಿದ್ದೇನೆ. ನನ್ನನ್ನು ಜನರು ಒಪ್ಪಿಕೊಂಡಿದ್ದಾರೆ. ಬಸ್ ನಿಲ್ದಾಣದಲ್ಲಿ ಕಾಣಿಸಿಕೊಂಡರೂ 25-30 ಆಟೋ ಚಾಲಕರು ಬಂದು ಮಾತನಾಡಿಸುತ್ತಾರೆ. ನಾನು ಆ ರೀತಿಯ ಸಂಪರ್ಕ ಇಟ್ಟಿದ್ದೇನೆ ಎಂದು ಪ್ರದೀಪ್ ಎಂಬುವವರ ಜೊತೆಗೆ ಈ ಸಂಭಾಷಣೆಯಲ್ಲಿ ಮಾತುಗಳು ಕೇಳಿಬರುತ್ತವೆ.
ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, “ನೋ ಕಾಮೆಂಟ್ಸ್” ಎಂದು ಸಂಕ್ಷಿಪ್ತವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ, ಈ ಹೇಳಿಕೆ ಕೂಡ ರಾಜಕೀಯ ವಲಯದಲ್ಲಿ ಹಲವು ರೀತಿಯ ಚರ್ಚೆಗೆ ಕಾರಣವಾಗಿದೆ. ಇನ್ನೊಂದೆಡೆ, ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ನಡೆದಿತ್ತೇ? ಎಂಬ ಪ್ರಶ್ನೆ ಬಿಜೆಪಿ ಕಾರ್ಯಕರ್ತರು ಹಾಗೂ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

