ಐದು ರಾಜ್ಯಗಳ ಚುನಾವಣೆ ಮುಗಿದ ನಂತರ ಸದ್ಯ ಕಳೆದ ಎರಡ್ಮೂರು ದಿನಗಳಿಂದ ಕರ್ನಾಟಕ (Karnataka Politics) ರಾಜಕೀಯದ ಸುದ್ದಿಯೇ ದೇಶಾದ್ಯಂತ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರದಾಡ್ತಿದ್ದು, ಆ ನಂತರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಲಾಗ್ತಿದೆ.


ಯಸ್, ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದ್ಯಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಇಂದು ನಡೆದ ಹೈವೋಲ್ಟೇಜ್ ಮೀಟಿಂಗ್ನಲ್ಲಿ ಸಿದ್ದರಾಮಯ್ಯ ಮುಂದೆ ಪರೋಕ್ಷವಾಗಿ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ನಿಮಗೆ ರಾಜ್ಯಸಭೆಯಲ್ಲಿ ಸ್ಥಾನ ನೀಡುತ್ತೀವಿ ಎಂಬ ಆಫರ್ ಸಿದ್ದರಾಮಯ್ಯ ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಇನ್ನು ಸಿದ್ದರಾಮಯ್ಯ ಪುತ್ರ, ಹಾಲಿ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯರನ್ನು ಉಪ ಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಹೈಕಮಾಂಡ್ ಭರವಸೆ ನೀಡಿದ್ಯಂತೆ.
ಇದು ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ನೀಡುವ ರಾಜಕೀಯ ಗೌರವ ಎಂದೇ ಪರಿಗಣಿಸಲಾಗುತ್ತಿದೆ. ಹೀಗಾಗಿ ಪಕ್ಷ ತನ್ನನ್ನು ಗೌರವಯುತವಾಗಿ ನಡೆಸಿಕೊಳ್ಳುವ ಭರವಸೆ ನೀಡಿದ್ದರಿಂದ ಒಲ್ಲದ ಮನಸ್ಸಿನಿಂದಲೇ ಸಿದ್ದರಾಮಯ್ಯ ಅವರು ಈ ನಿರ್ಧಾರಕ್ಕೆ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗ್ತಿದೆ.
ನಾಯಕತ್ವ ಬದಲಾವಣೆಗೆ ಕಾರಣವೇನು?
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಅಧಿಕಾರ ಹಸ್ತಾಂತರದ ಬಗ್ಗೆ ಒಪ್ಪಂದವಾಗಿತ್ತು ಎಂಬ ಸುದ್ದಿ ಅಂದಿನಿಂದ ಇಂದಿನತನಕವೂ ವೆಂಕಟೇಶ್ವರ ಸ್ತೋತ್ರದಂತೆ ನಿತ್ಯ ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿತ್ತು. ಆದರೆ ಇದೀಗ ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, 2029ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕತ್ವವು ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಪಾತ್ರವನ್ನು ವಹಿಸುವ ಆಫರ್ ನೀಡಿದೆ ಎಂದು ಮೂಲಗಳು ತಿಳಿಸಿವೆ.

