

Jameer Ahammad: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ವಿಚಾರ ಬ್ರೇಕ್ ಇಲ್ಲದ ಚರ್ಚೆಯಾಗಿ ಮಾರ್ಪಟ್ಟಿದೆ. ದಿನದಿಂದ ದಿನಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಈ ವಿಚಾರವಾಗಿ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ. ಇದೀಗ ಡಿಕೆ ಶಿವಕುಮಾರ್ ಅವರು ಸಿಎಂ ಪಟ್ಟಕ್ಕಾಗಿ ದೆಹಲಿಗೆ ದೌಡಾಯಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಿಎಂ ಪಟ್ಟದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಹೌದು, ‘2028ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ, ಮುಂದಿನ ಚುನಾವಣೆಯೂ ಅವರ ನೇತೃತ್ವದಲ್ಲೇ ನಡೆಯಲಿದೆ. ನಮ್ಮದು ಹೈಕಮಾಂಡ್ ಪಕ್ಷ. ಹೈಕಮಾಂಡ್ ಏನೇ ನಿರ್ಧಾರ ತಗೊಂಡ್ರೂ ನಾವು ಬದ್ಧರಾಗಿರುತ್ತೇವೆ. ಒಂದು ವೇಳೆ ಬೀದಿಯಲ್ಲಿ ಹೋಗೋ ದಾಸಯ್ಯನನ್ನು ತಂದು ಸಿಎಂ ಮಾಡಿದ್ರೂ ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಸದ್ಯಕ್ಕೆ 2028ರವರೆಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ’ ಎಂದು ಜಮೀರ್ ಹೇಳಿಕೆ ನೀಡಿದ್ದಾರೆ.
ಅಲ್ಲದೆ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಓಡಾಡುತ್ತಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಜಮೀರ್, ನಮ್ಮ ಹೈಕಮಾಂಡ್ ನಾಯಕರು ಎಲ್ಲರಿಗೂ ಲಭ್ಯವಿರುತ್ತಾರೆ. ಡಿಕೆಶಿ ಅವರು ಹೈಕಮಾಂಡ್ ಭೇಟಿಯಾಗಲು ಯಾವುದೇ ರೀತಿ ತಡಕಾಡುತ್ತಿಲ್ಲ. ಅವರು ಪಕ್ಷದ ಹಿರಿಯ ನಾಯಕರಾಗಿದ್ದು, ಭೇಟಿ ಮಾಡುವುದು ಸಹಜ ಎಂದೂ ಸಮರ್ಥಿಸಿಕೊಂಡಿದ್ದಾರೆ.













