Home » Karnataka Budget -2026: ಕೃಷಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆ ಏನು?

Karnataka Budget -2026: ಕೃಷಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆ ಏನು?

0 comments

Karnataka Budget -2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಬಜೆಟ್‌ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. ಇದರಲ್ಲಿ ಕೃಷಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆ ಏನು?

40 ಲಕ್ಷ ರೈತರಿಗೆ 468 ಕೋಟಿ ರೂ. ಮೊತ್ತದಲ್ಲಿ ಬಿತ್ತನೆ ಬೀಜಗಳಿಗೆ ಸಹಾಯಧನ ವಿತರಣೆ.

2,825 ಕೋಟಿ ವೆಚ್ಚ ಭರಿಸಿ 7 ಲಕ್ಷ ರೈತರಿಗೆ ಹನಿನೀರಾವರಿ ಘಟಕ ಸ್ಥಾಪನೆ ಹಾಗೂ3.41 ಲಕ್ಷ ರೈತರಿಗೆ ಕೃಷಿ ಯಂತ್ರೋಪಕರಣಗಳ ವಿತರಣೆ.

363 ಕೋಟಿ ರೂ. ಮೊತ್ತದಲ್ಲಿ 32,138 ಕೃಷಿ ಹೊಂಡಗಳ ನಿರ್ಮಾಣ.

banner

51 ಲಕ್ಷ ರೈತರಿಗೆ 6,213 ಕೋಟಿ ಬೆಳೆ ವಿಮೆ ಪರಿಹಾರ.

36 ಲಕ್ಷ ನೀರಾವರಿ ಪಂಪ್‌ಸೆಟ್‌ಗಳಿಗೆ 48,000 ಕೋಟಿ ರೂ. ಉಚಿತ ವಿದ್ಯುತ್‌ ಸಹಾಯಧನ.

83 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 70 ಸಾವಿರ ಕೋಟಿ ರೂ. ಕೃಷಿ ಸಾಲ ವಿತರಣೆ.

ಉತ್ಪಾದನೋತ್ತರ ಕೃಷಿ ಚಟುವಟಿಕೆಗಳಾದ ಸಂಸ್ಕರಣೆ, ಮೌಲ್ಯವರ್ಧನೆ, ಮೌಲ್ಯ ಸರಪಳಿ ಅಭಿವೃದ್ಧಿ, ಕೃಷಿ ತ್ಯಾಜ್ಯಗಳ ಮರುಬಳಕೆ ಹಾಗೂ ಮಾರುಕಟ್ಟೆ ಸಂಪರ್ಕಗಳನ್ನು ಸಮಗ್ರವಾಗಿ ಬಲಪಡಿಸುವ ಮೂಲಕ ಗ್ರಾಮೀಣ ರೈತರಿಗೆ ಸ್ಥಿರ ಮತ್ತು ಹೆಚ್ಚುವರಿ ಆದಾಯದ ಮೂಲಗಳನ್ನು ಸೃಜಿಸುವ ಉದ್ದೇಶದಿಂದ ʻಮುಖ್ಯಮಂತ್ರಿ ಕೃಷಿ ವಿಸ್ತಾರʼ ಯೋಜನೆಯನ್ನು ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.

ರಾಜ್ಯದಲ್ಲಿ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳನ್ನು ಉತ್ತೇಜಿಸಲು ನಿರ್ಮಿಸಲಾಗುತ್ತಿರುವ ʻಮಿಲೆಟ್ ಹಬ್ʼ ಅನ್ನು ರೈತರು, ಗ್ರಾಮೀಣ ಯುವಕರು ಮತ್ತು ನವ ಉದ್ಯಮಿಗಳಿಗೆ ತಾಂತ್ರಿಕ ಸಹಾಯ, ಸಂಸ್ಕರಣಾ ಸೌಲಭ್ಯ, ಗುಣಮಟ್ಟ ಪ್ರಮಾಣೀಕರಣ ಮತ್ತು ಮಾರುಕಟ್ಟೆ ಸಂಪರ್ಕಗಳನ್ನು ಒಂದೇ ಸೂರಿನಡಿ ಕಲ್ಪಿಸುವ ಏಕಗವಾಕ್ಷಿ ವ್ಯವಸ್ಥೆಯೊಂದಿಗೆ ಸ್ವಾವಲಂಬಿ ಸಂಸ್ಥೆಯನ್ನಾಗಿಸಲಾಗುವುದು.

ರೈತರಿಗೆ ಮಣ್ಣು, ನೀರು, ಬೀಜ ಹಾಗೂ ರಸಗೊಬ್ಬರ ಪರೀಕ್ಷೆಗಳಲ್ಲಿ ನಿಖರ ಫಲಿತಾಂಶಗಳನ್ನು ಒದಗಿಸಿ ಕೃಷಿ ಉತ್ಪಾದಕತೆ ಹೆಚ್ಚಿಸಲು ಇಲಾಖೆಯ ಎಲ್ಲಾ ಪ್ರಯೋಗಾಲಯಗಳಿಗೆ NABLಮಾನ್ಯತೆ ಪಡೆದು ವಿಶ್ವಾಸಾರ್ಹ ಹಾಗೂ ವೈಜ್ಞಾನಿಕ ಪರೀಕ್ಷಣಾ ಸೇವೆಗಳನ್ನು ಒದಗಿಸಲಾಗುವುದು.

ನೂತನ ದ್ವಿದಳಧಾನ್ಯ ತಳಿಗಳ ಬಿತ್ತನೆ ಬೀಜಗಳ ಬಳಕೆಯನ್ನು ರೈತರಲ್ಲಿ ಪ್ರೇರೇಪಿಸಲು ನೀಡುತ್ತಿರುವ ಸಹಾಯಧನವನ್ನು ಹೆಚ್ಚಿಸಲಾಗುವುದು.

ಮಣ್ಣಿನ ಸಾವಯವ ಇಂಗಾಲ ಹಾಗೂ ಅದರ ಭೌತಿಕ, ರಾಸಾಯನಿಕ ಮತ್ತು ಜೈವಿಕ ಗುಣಮಟ್ಟವನ್ನು ಹೆಚ್ಚಿಸುವ ಮೂಲಕ ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ʻವಸುಧಾಮೃತʼ ಕಾರ್ಯಕ್ರಮವನ್ನು ಮುಂದಿನ ಮೂರು ವರ್ಷಗಳಲ್ಲಿ ಜಾರಿಗೊಳಿಸಲಾಗುವುದು.

ಬೆಳೆಗಳಲ್ಲಿ ಕೀಟ ಹಾಗೂ ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಇವುಗಳನ್ನು ನಿಯಂತ್ರಿಸಲು ಅಗತ್ಯವಿರುವ ಪರಿಸರ ಸ್ನೇಹಿ ಜೈವಿಕ ಪೀಡೆನಾಶಕ/ಜೈವಿಕ ಕೀಟನಾಶಕಗಳ ಜೊತೆ ಇತರೆ ಸುರಕ್ಷಿತ ನಿರ್ವಹಣಾ ಕ್ರಮಗಳ ಶಿಫಾರಸ್ಸುಗಳನ್ನು ರೈತರಿಗೆ ಸಕಾಲದಲ್ಲಿ ಒದಗಿಸಲು ʻಸಸ್ಯ ಸಂಜೀವಿನಿ’ ಯೋಜನೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಅನುಷ್ಠಾನಗೊಳಿಸಲಾಗುವುದು.

ರೈತರಿಗೆ ಒಂದೇ ಸೂರಿನಡಿ ಹವಾಮಾನ, ಮಾರುಕಟ್ಟೆ, ಕೃಷಿ ತಾಂತ್ರಿಕತೆ ಮತ್ತು ಇಲಾಖಾ ಮಾಹಿತಿಯನ್ನು ತ್ವರಿತವಾಗಿ ಒದಗಿಸಲು ಕೃಷಿ ಇಲಾಖೆಯ ʻರೈತ ಕರೆ ಕೇಂದ್ರʼವನ್ನು
AI ತಂತ್ರಜ್ಞಾನದಿಂದ ಉನ್ನತೀಕರಿಸಲಾಗುವುದು.

ಚಿತ್ರದುರ್ಗ ಜಿಲ್ಲೆಯ ಬಬ್ಬೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ ʻಕೃಷಿ ಉದ್ದಿಮೆ ತರಬೇತಿ ಕೇಂದ್ರʼವನ್ನಾಗಿ ಉನ್ನತೀಕರಿಸಲಾಗುವುದು.

ಕೃಷಿ ಚಟುವಟಿಕೆಯಲ್ಲಿ ರೈತರ ಸಮಯ ಹಾಗೂ ಶ್ರಮ ತಗ್ಗಿಸುವುದರೊಂದಿಗೆ ಉತ್ಪಾದನಾ ವೆಚ್ಚವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ನಿಖರ ಬಿತ್ತನೆ ಮತ್ತು ನಾಟಿ
ಯಂತ್ರಗಳನ್ನು ಹೈಟೆಕ್ಹಾರ್ವೆಸ್ಟರ್ಹಬ್ಯೋಜನೆಯಡಿ ಸೇರ್ಪಡೆಗೊಳಿಸಲಾಗುವುದು.

ಕೃಷಿ ಸಂಬಂಧಿತ ಕಸುಬುಗಳನ್ನು ಮತ್ತು ಸ್ಥಳೀಯ ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಹಾಗೂ ಸಣ್ಣ, ಅತೀ ಸಣ್ಣ ರೈತರಿಗೆ ಸ್ಥಳೀಯವಾಗಿ ಅಗತ್ಯವಿರುವ ಎತ್ತು ಚಾಲಿತ ಹಾಗೂ ಕೈಚಾಲಿತ ಉಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆಯಡಿ ಒದಗಿಸಲಾಗುವುದು.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕನ್ನು ಸಂಪೂರ್ಣ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸಲು ಅಧಿಕೃತ ಸಾವಯವ ಪ್ರಮಾಣೀಕರಣ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.

ಹವಾಮಾನ ಬದಲಾವಣೆಗೆ ಹೊಂದಾಣಿಕೆ ಹಾಗೂ ತಗ್ಗಿಸುವಿಕೆಯ ರಾಜ್ಯದ ಪ್ರಯತ್ನಗಳನ್ನು ಬಲಪಡಿಸಿ ಕೃಷಿಯನ್ನು ಸುಸ್ಥಿರ ಹಾಗೂ ಪರಿಸರ ಸ್ನೇಹಿಯಾಗಿಸಲು ಭತ್ತದ ಕೃಷಿಯಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಪರ್ಯಾಯ ತೇವ-ಒಣಗಿಸುವ (Alternate Wetting & Drying) ವಿಧಾನಗಳನ್ನು ಉತ್ತೇಜಿಸಲಾಗುವುದು.

ರೈತರಿಗೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಕೈಗೆಟುಕುವ ದರದಲ್ಲಿ ಲಭ್ಯವಾಗಿಸುವುದರ ಜೊತೆಗೆ ಮಾರುಕಟ್ಟೆಯ ಅನಿಶ್ಚಿತತೆಯನ್ನು ನಿವಾರಿಸುವ ಉದ್ದೇಶದಿಂದ ಬಿತ್ತನೆ ಬೀಜಗಳು, ಕೀಟನಾಶಕಗಳು, ರಸಗೊಬ್ಬರಗಳು ಹಾಗೂ ಕೃಷಿ ಯಂತ್ರೋಪಕರಣಗಳು ಒಂದೇ ಸೂರಿನಡಿ ದೊರಕಿಸಲು ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನಲ್ಲಿ MSIL ವತಿಯಿಂದ ರೈತ ಮಾಲ್‌ಗಳನ್ನು ಸ್ಥಾಪಿಸಲಾಗುವುದು.

ರೈತರಿಗೆ ಕಳಪೆ, ಅಸುರಕ್ಷಿತ, ದೋಷಪೂರಿತ ಬೀಜಗಳು ಮತ್ತು ಕೀಟನಾಶಕಗಳನ್ನು ಪೂರೈಸುವುದನ್ನು ಹಾಗೂ ಕೃಷಿ ಪರಿಕರಗಳನ್ನು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧ್ಯಯನ ಮಾಡಿ ಸೂಕ್ತ ಶಿಫಾರಸ್ಸುಗಳನ್ನು ಸಲ್ಲಿಸಲು ರಾಜ್ಯ ಮಟ್ಟದ ಸಲಹಾ ಸಮಿತಿಯನ್ನು ರಚಿಸಲಾಗುವುದು.

ತಜ್ಞರ ಕಾರ್ಯಸಾಧ್ಯತಾ ವರದಿಯ ಶಿಫಾರಸ್ಸಿನಂತೆ ಅಥಣಿಯಲ್ಲಿ ಕೃಷಿ ಕಾಲೇಜನ್ನು ಸ್ಥಾಪಿಸಲು ಅಗತ್ಯವಿರುವ ಪ್ರಥಮ ಹಂತದ ಮೂಲಸೌಕರ್ಯ ಒದಗಿಸಲಾಗುವುದು.

ತೋಟಗಾರಿಕೆ

2.23 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಹನಿನೀರಾವರಿ ಅಳವಡಿಸಿ 2.36 ಲಕ್ಷ ರೈತರಿಗೆ ಅನುಕೂಲ;

ಬೆಳೆ ವಿಮೆ ಯೋಜನೆಯಡಿ 11 ಲಕ್ಷ ರೈತರಿಗೆ 2,378 ಕೋಟಿ ರೂ.ಗಳ ಬೆಳೆ ವಿಮೆ ಪರಿಹಾರ;

21,360 ಫಲಾನುಭವಿಗಳಿಗೆ 9,800 ಕೊಯ್ಲೋತ್ತರ ಘಟಕಗಳ ನಿರ್ಮಾಣ.

ತೋಟಗಾರಿಕೆ ಇಲಾಖೆಯ ಕ್ಷೇತ್ರಗಳು ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ಜಮೀನನ್ನು ಉಪಯೋಗಿಸಿ ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳನ್ನು PPP ಮಾದರಿಯಲ್ಲಿ ಸ್ಥಾಪಿಸಲಾಗುವುದು.

ಅಡಿಕೆ ಬೆಳೆಯ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳ ಮತ್ತು ತೆಂಗು ಬೆಳೆಯ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕಾಗಿ ವಿಶ್ವವಿದ್ಯಾಲಯಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರಗಳ ಸಹಯೋಗದೊಂದಿಗೆ ಸಮುದಾಯ ಆಧಾರಿತ ರೋಗ-ಕೀಟ ನಿಯಂತ್ರಣ ಕ್ರಮಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.

ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳನ್ನು 64 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಎಲ್ಲಾ ಕೃಷಿ ಮಾರುಕಟ್ಟೆಗಳಲ್ಲಿ ಶೀತಲಗೃಹಗಳನ್ನು ಹಂತ ಹಂತವಾಗಿ ನಿರ್ಮಿಸಲಾಗುವುದು.

ಹೆಚ್ಚಿನ ಪ್ರವಾಸಿಗರನ್ನು ಹಾಗೂ ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ದೃಷ್ಟಿಯಿಂದ ಮೈಸೂರಿನ ಲಿಂಗಾಂಬುಧಿ ಸಸ್ಯ ತೋಟವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.

ನೀರಿನ ಸಂರಕ್ಷಣೆ ಮತ್ತು ಮಣ್ಣಿನಿಂದ ಹರಡುವ ರೋಗಗಳನ್ನು ತಡೆಗಟ್ಟಲು ಹೈಡ್ರೋಪೊನಿಕ್ಸ್‌ (Hydroponics) ಹಾಗೂ ಕೋಕೋಪೀಟ್‌ (Coco peat) ಆಧಾರಿತ ಮಣ್ಣಿಲ್ಲದ ಕೃಷಿಯನ್ನು ಪ್ರೋತ್ಸಾಹಿಸಲಾಗುವುದು.

ತಜ್ಞರ ಕಾರ್ಯಸಾಧ್ಯತಾ ವರದಿಯ ಶಿಫಾರಸ್ಸಿನಂತೆ ಡಂಬಳದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲು ಅಗತ್ಯವಿರುವ
ಪ್ರಥಮ ಹಂತದ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.

ರೇಷ್ಮೆ

ಭಾರತದ ರೇಷ್ಮೆ ಉತ್ಪಾದನೆಯಲ್ಲಿ ಶೇ.46ರಷ್ಟು ಪಾಲು ಹೊಂದಿರುವ ಕರ್ನಾಟಕವು ದೇಶದ ರೇಷ್ಮೆ ರಾಜಧಾನಿಯಾಗಿದೆ. ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ರೀಲಿಂಗ್‌ ಶೆಡ್‌ ನಿರ್ಮಾಣ, ಹನಿ ನೀರಾವರಿ ಘಟಕ ಮುಂತಾದ ಚಟುವಟಿಕೆಗಳಿಗೆ ಕಳೆದ ಮೂರು ವರ್ಷಗಳಲ್ಲಿ 531 ಕೋಟಿ ರೂ. ಮೊತ್ತದ ಸಹಾಯಧನವನ್ನು 2 ಲಕ್ಷ ಫಲಾನುಭವಿಗಳಿಗೆ ಒದಗಿಸಲಾಗಿದೆ

ಪ್ರಮುಖ 15 ರೇಷ್ಮೆಗೂಡು ಮಾರುಕಟ್ಟೆಗಳಲ್ಲಿ ಸಂಪೂರ್ಣ
ನಗದುರಹಿತ, ಡಿಜಿಟಲ್‌ ವಹಿವಾಟು, ಇ-ಹರಾಜು,
ಇ-ಪೇಮೆಂಟ್‌ ಮತ್ತು ಇ-ಪಾವತಿ ವ್ಯವಸ್ಥೆಯನ್ನು ಆರಂಭಿಸಿದ ದೇಶದ ಮೊದಲ ಮತ್ತು ಏಕೈಕ ರಾಜ್ಯ ಕರ್ನಾಟಕ ಎಂಬುದು ಹೆಮ್ಮೆಯ ವಿಷಯವಾಗಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ಪಾದಿಸುವ ರೇಷ್ಮೆಗೂಡನ್ನು ಸರ್ಕಾರದ ಯಾವುದೇ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಪ್ರತಿ ಕೆ.ಜಿ. ಗೂಡಿಗೆ ಇರುವ 10 ರೂ. ಸಾಗಾಣಿಕಾ ವೆಚ್ಚವನ್ನು 20 ರೂ. ಗೆ ಹೆಚ್ಚಿಸಲಾಗುವುದು.

ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ ಕಲಬುರಗಿಯಲ್ಲಿ ಸಿಲ್ಕ್‌ ಪಾರ್ಕ್‌ಗಳ ಸ್ಥಾಪನೆಗೆ ಕ್ರಮವಹಿಸಲಾಗುವುದು.

ರೇಷ್ಮೆ ಇಲಾಖೆಯ ಆಯ್ದ ಕ್ಷೇತ್ರಗಳಲ್ಲಿ ಲಭ್ಯವಿರುವ ಜಮೀನಿನಲ್ಲಿ ರೈತ ಉದ್ಯಮಿ ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಸಹಯೋಗದೊಂದಿಗೆ ಚಾಕಿ ಸಾಕಾಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಪಶುಸಂಗೋಪನೆ

2026-27ನೇ ಸಾಲಿನಲ್ಲಿ ನಬಾರ್ಡ್‌ ಸಹಯೋಗದೊಂದಿಗೆ ಹೊಸದಾಗಿ 100 ಕಟ್ಟಡಗಳನ್ನು ನಿರ್ಮಿಸಲಾಗುವುದು.

ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಆಯ್ದ 10,000 ಫಲಾನುಭವಿಗಳಿಗೆ ಶೇ.25ರಷ್ಟು ಸಹಾಯಧನದಲ್ಲಿ ಕುರಿ/ಮೇಕೆ ಘಟಕಗಳನ್ನು ಸ್ಥಾಪಿಸುವ ಯೋಜನೆಯನ್ನು ರೂಪಿಸಲಾಗಿದೆ. ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಆಯ್ದ 10,000 ಫಲಾನುಭವಿಗಳಿಗೆ ಶೇ.25ರಷ್ಟು ಸಹಾಯಧನದಲ್ಲಿ ಹಸು/ಎಮ್ಮೆ ಖರೀದಿಸಲು ಪ್ರೋತ್ಸಾಹಧನ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗಳಿಗೆ ಒಟ್ಟು 40 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗುವುದು.

ಜಿಲ್ಲಾ ಹಂತದಲ್ಲಿರುವ ತಜ್ಞ ಪಶುವೈದ್ಯಕೀಯ ವಿಶೇಷ
ಸೇವೆ ವ್ಯವಸ್ಥೆಯನ್ನು ತಾಲ್ಲೂಕು ಹಂತಕ್ಕೆ ವಿಸ್ತರಿಸಲು
20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 15 ತಾಲ್ಲೂಕು ಪಶು ಆಸ್ಪತ್ರೆಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.

ಸ್ಥಳೀಯ ಮೇಕೆ ತಳಿಗಳ ಉನ್ನತೀಕರಣಕ್ಕಾಗಿ ಮೈಸೂರಿನಲ್ಲಿ ಬೋಯರ್‌ ಮೇಕೆ ತಳಿ ಸಂವರ್ಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು. ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಬಂಡೂರು ಕುರಿ ತಳಿ ಸಂವರ್ಧನಾ ಕೇಂದ್ರದ ಸಮಗ್ರ ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದು.

ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆಗಳನ್ನು ನಿವಾರಿಸಲು ʻವರ್ಷಕ್ಕೊಂದು ಕರುʼ ಎಂಬ ಘೋಷವಾಕ್ಯದೊಂದಿಗೆ ರಾಜ್ಯದ 1,000 ಗ್ರಾಮ ಪಂಚಾಯಿತಿಗಳಲ್ಲಿ ʻಫಲಧಾರೆʼ ಶಿಬಿರಗಳನ್ನು ಐದು ಕೋಟಿ ರೂ. ವೆಚ್ಚದಲ್ಲಿ ಏರ್ಪಡಿಸಲಾಗುವುದು.

ಪಶುಗಳಲ್ಲಿನ ರೋಗಗಳನ್ನು ನಿಖರವಾಗಿ ಪತ್ತೆ ಹಚ್ಚಲು ರಾಜ್ಯದಲ್ಲಿ ಪ್ರಪ್ರಥಮವಾಗಿ ಬೆಂಗಳೂರು ಹಾಗೂ ಬೀದರ್‌ನ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶು ಆಸ್ಪತ್ರೆಗಳಲ್ಲಿ ಜಾನುವಾರುಗಳ ಸಿ.ಟಿ. ಸ್ಕ್ಯಾನಿಂಗ್‌ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಬೀದಿ ನಾಯಿಗಳ ಸಮಸ್ಯೆಗೆ ಪರಿಹಾರೋಪಾಯವಾಗಿ ಸಂತಾನಹರಣ ನಿಯಂತ್ರಣವನ್ನು ವೈಜ್ಞಾನಿಕ ಹಾಗೂ ಪರಿಣಾಮಕಾರಿ ರೀತಿಯಲ್ಲಿ ಜಾರಿಗೆ ತರುವ ಉದ್ದೇಶದಿಂದ ಪಶುವೈದ್ಯರು ಮತ್ತು ಪಶುವೈದ್ಯಕೀಯ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ತಾಂತ್ರಿಕ ತರಬೇತಿಯನ್ನು ನೀಡಲು ಬೆಂಗಳೂರು ಹಾಗೂ ಬೀದರ್‌ನಲ್ಲಿ ʻಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರʼವನ್ನು ಸ್ಥಾಪಿಸಲಾಗುವುದು.

You may also like